ಮಡಿಕೇರಿ, ಫೆ. 8: ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಪರೀಕ್ಷೆ ಎದುರಿಸಲು ಸಿದ್ದರಾಗಲು ಪರೀಕ್ಷಾ ಪೂರ್ವ ತರಬೇತಿ ಏರ್ಪಡಿಸಲಾಗಿತ್ತು.

ನಗರದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಣತ ಶಿಕ್ಷಕರು ಇಂಗ್ಲೀಷ್, ಗಣಿತ, ಸಮಾಜ, ಸಮಾಜ ವಿಜ್ಞಾನ ವಿಷಯಗಳಲ್ಲಿ ಪರೀಕ್ಷೆ ಎದುರಿಸುವ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಂತ ಮೈಕಲರ ಶಾಲೆಯ ಶಿಕ್ಷಕಿ ಕುಸುಮ, ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಚೋಕಿರ ಅನಿತಾ, ಸಂಪಾಜೆ ಪ್ರೌಢಶಾಲೆಯ ಶಿಕ್ಷಕ ಕುಮಾರ್, ಚೆಟ್ಟಳ್ಳಿ ಪ್ರೌಢಶಾಲೆಯ ಶಿಕ್ಷಕ ಸತ್ಯನಾರಾಯಣ ಪಾಲ್ಗೊಂಡಿದ್ದರು. ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಪಿ. ಗುರುರಾಜ್ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ಆಗಮಿಸಿದ್ದರು. ಆನಂದಿ, ಚೈತ್ರ ಪ್ರಾರ್ಥಿಸಿ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮೇಪಾಡಂಡ ಸವಿತ ಕೀರ್ತನ್ ಸ್ವಾಗತಿಸಿ, ನಿರೂಪಿಸಿದರು. 150 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.