ಸಿದ್ದಾಪುರ, ಫೆ. 8 : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬಂದು ಹೆಚ್.ಡಿ. ಕುಮಾರಸ್ವಾಮಿಯವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜಿಲ್ಲಾ ಜೆ.ಡಿ.ಎಸ್. ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಭವಿಷ್ಯ ನುಡಿದಿದ್ದಾರೆ.

ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಗೆ ನಡೆಯಲಿರುವ ಉಪ ಚುನಾವಣೆಗೆ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಂಜಿಪ್ ಅವರ ಪರ ಮತಯಾಚನೆ ಸಂದರ್ಭ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ಕೃಷಿಕರಿಗೆ ಹಾಗೂ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅವರು ಗ್ರಾಮ ವಾಸ್ತವ್ಯ ಮಾಡಿ ಸಮಸ್ಯೆಗಳನ್ನು ಆಲಿಸಿದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು.

ಇದೇ ಸಂದರ್ಭ ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ತೆರಳಿ ಪಕ್ಷದ ಬೆಂಬಲಿತ ಅಭ್ಯರ್ಥಿ ಪರ ಮತಯಾಚಿಸಿದರು.

ಈ ಸಂದರ್ಭ ಜಿಲ್ಲಾ ಯುವ ಜೆ.ಡಿ.ಎಸ್ ಅಧ್ಯಕ್ಷ ಸಿ.ಎಲ್ ವಿಶ್ವ, ಗ್ರಾ.ಪಂ ಸದಸ್ಯರಾದ ಚಂದ್ರಾವತಿ, ಜೆ.ಸಿ ತಮ್ಮಯ್ಯ, ಪಕ್ಷದ ಪದಾಧಿಕಾರಿಗಳಾದ ಶ್ರೀಜೇಶ್, ಕಿಶು, ಹ್ಯಾರೀಸ್, ಮಜೀದ್ ಹಾಗೂ ಸ್ಥಳೀಯ ಸ್ಥಾನೀಯ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.