ಗೋಣಿಕೊಪ್ಪಲು, ಫೆ. 14: ಹುಲಿ ಧಾಳಿಯಿಂದ ಗಾಯಗೊಂಡಿರುವ ದೇವನೂರು ಗ್ರಾಮದ ತಾರಾ ಅಯ್ಯಮ್ಮ ಅವರ ಲೈನ್‍ಮನೆಯಲ್ಲಿದ್ದ ಬೊಳ್ಳ ಎಂಬ ಕಾರ್ಮಿಕನ ಮನೆಗೆ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ಬೊಳ್ಳನಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಅಧ್ಯಕ್ಷರ ಆಯ್ಕೆಗೆ ಒತ್ತಾಯ: ಕಾಂಗ್ರೆಸ್ ಪಕ್ಷದ ಸಂಘಟನೆ ಹೆಚ್ಚಿಸಲು ನಾಯಕರ ಕೊರತೆ ಇದ್ದು ಜಿಲ್ಲೆಗೆ ತಕ್ಷಣ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು ಎಂದು ಬಾಳೆಲೆ ಕಾರ್ಯಕರ್ತರು ಇದೇ ಸಂದರ್ಭ ಆಗ್ರಹಿಸಿದರು.

ಸಕ್ರಿಯವಾಗಿ ಪಕ್ಷದ ಅಭಿವೃದ್ಧಿಗೆ ಶ್ರಮಿಸುವ ನಾಯಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ದಿನೇಶ್ ಗುಂಡೂರಾವ್ ಅವರ ಬಳಿ ಅನಿಸಿಕೆ ವ್ಯಕ್ತಪಡಿಸಿದರು.

(ಮೊದಲ ಪುಟದಿಂದ) ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿಂತನೆ ಮಾಡುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಸದಸ್ಯ ಬಾನಂಡ ಪ್ರುಥ್ಯು, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ, ಕಾರ್ಯದರ್ಶಿ ಕಾಡ್ಯಮಾಡ ಚೇತನ್, ಬಾಳೆಲೆ ಗ್ರಾ.ಪಂ. ಅಧ್ಯಕ್ಷ ಪವನ್ ಚಿಟ್ಟಿಯಪ್ಪ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.