ಮಡಿಕೇರಿ, ಫೆ. 15: ಹೈಟೆಕ್ ಮಾರುಕಟ್ಟೆ ಕಾಮಗಾರಿ ಬಿರುಸಿನಿಂದ ನಡೆಯುತ್ತಿದ್ದು, ಇಂದು ನಗರ ಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್ ಇವರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾಸಗಿ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೂ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಕಾವೇರಮ್ಮ ಸೋಮಣ್ಣ ಅವರು, ಮಾರುಕಟ್ಟೆ ಹಾಗೂ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಪ್ರಯತ್ನಿಸಲಾಗುವದು ಎಂದು ಹೇಳಿದರು. ಮಾರುಕಟ್ಟೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವದರೊಂದಿಗೆ ಗುಣಮಟ್ಟ ಕಾಯ್ದುಕೊಳ್ಳಲು ಒತ್ತು ನೀಡುವದಾಗಿ ಹೇಳಿದರು. ನಗರಸಭಾ ಹಿರಿಯ ಸದಸ್ಯ ಹಾಗೂ ಮೂಡಾ ಅಧ್ಯಕ್ಷ ಚುಮ್ಮಿ ದೇವಯ್ಯ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಜಲಮೂಲಗಳ ರಕ್ಷಣೆಗೆ ನಗರಸಭೆಯ ಸಹಕಾರ ದೊಂದಿಗೆ ಮೂಡಾ ಪ್ರಾಮಾಣಿಕ ವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ಈ ಸಂದರ್ಭ ನಗರಸಭಾ ಸದಸ್ಯ ಪೀಟರ್ ಮತ್ತಿತರರು ಇದ್ದರು.