ಗೋಣಿಕೊಪ್ಪಲು, ಫೆ. 15: ಮಹಾಶಿವರಾತ್ರಿ ಆಚರಣೆ ಪ್ರಯುಕ್ತ ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿ ತಾ. 24 ರಂದು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾಟ್ರಕೊಲ್ಲಿ ಮಾತಾಯಿ ಪುರುಷರ ಸ್ವಸಹಾಯ ಸಂಘದ ಮಾಜಿ ಅಧ್ಯಕ್ಷ ಎಂ.ಬಿ. ಅನೀಶ್ ತಿಳಿಸಿದ್ದಾರೆ.

ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಂಗೀತ ರಸಮಂಜರಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಕ್ಕಳು ತಮ್ಮಲ್ಲಿರುವ ನೃತ್ಯ, ನಾಟಕ ಸೇರಿದಂತೆ ಅವರ ಕಲೆಯನ್ನು ಕಾರ್ಯಕ್ರಮದಲ್ಲಿ ಅನಾವರಣ ಗೊಳಿಸಬಹುದು. ಕಾರ್ಯಕ್ರಮ ನೀಡುವ ಮಕ್ಕಳು ತಾ. 20 ರೊಳಗೆ ಹೆಸರನ್ನು 9901734185 ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು. ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, ಕಳೆದ 11 ವರ್ಷಗಳಿಂದ ಶಿವರಾತ್ರಿ ಪ್ರಯುಕ್ತ ಹಲವು ಕಾರ್ಯಕ್ರಮ ನೀಡುತ್ತಾ ಬಂದಿದ್ದೇವೆ. ಈ ಬಾರಿ ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ನಿವೃತ್ತ ಯೋಧರಾದ ಮಾಚಿಮಾಡ ಸೋಮಯ್ಯ ಹಾಗೂ ಏಳನೇ ತರಗತಿ, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶಾಲೆಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವದು ಎಂದರು.

ಅಂದು ಬೆಳಿಗ್ಗೆ 11 ಗಂಟೆಗೆ ಸಂಘದ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ವೀಣಾ ಅಚ್ಚಯ್ಯ ಸೇರಿದಂತೆ ಸ್ಥಳೀಯ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.