ಮಡಿಕೇರಿ, ಫೆ. 17: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿ.ಎಸ್.ಇ.ಆರ್.ಟಿ.), ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಜಿಲ್ಲಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ತಾ. 18 ರಂದು (ಇಂದು) ಅಪರಾಹ್ನ 2 ಗಂಟೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಮಡಿಕೇರಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಅಪರಾಹ್ನ 2 ಗಂಟೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುವದು. ನಂತರ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಮೊದಲ 3 ತಂಡಗಳಿಗೆ ಅಂತಿಮವಾಗಿ ಮೌಖಿಕ ಪರೀಕ್ಷೆ ನಡೆಸಲಾಗುವದು. ಸ್ಪರ್ಧೆಗೆ ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಒಳಗೊಂಡ ತಂಡದೊಂದಿಗೆ ಹಾಜರಾಗಲು ತಿಳಿಸಿದೆ.

ಸ್ಪರ್ಧೆಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಒಳಗೊಂಡಿರುತ್ತವೆ ಎಂದು ರಸಪ್ರಶ್ನೆ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮಕುಮಾರ್ ತಿಳಿಸಿದ್ದಾರೆ.

ಅಂತಿಮ ಸ್ಪರ್ಧೆಯಲ್ಲಿ ವಿಜೇತಗೊಂಡು ಮೊದಲ ಸ್ಥಾನ ಪಡೆದ ತಂಡಕ್ಕೆ ರೂ. 3 ಸಾವಿರ ನಗದು ಹಾಗೂ ಎರಡನೇ ಸ್ಥಾನ ಪಡೆದ ತಂಡಕ್ಕೆ ರೂ. 2 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವದು. ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದ ತಂಡ ಮಾರ್ಚ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದೆ. ಹೆಚ್ಚಿನ ಮಾಹಿತಿಗೆ ಟಿ.ಜಿ. ಪ್ರೇಮಕುಮಾರ್, ಕಾರ್ಯಕ್ರಮ ಸಂಯೋಜಕರು (ಮೊ.ನಂ: 94485 88352) ಅಥವಾ ಸಿ.ಎಸ್. ಸುರೇಶ್, ಸಹ ಸಂಯೋಜಕರು, (99003 70842) ಅವರನ್ನು ಸಂಪರ್ಕಿಸಲು ತಿಳಿಸಿದೆ.