ಭಾಗಮಂಡಲ, ಫೆ. 18: ಭಾಗಮಂಡಲ ಹೋಬಳಿಯ ಅಯ್ಯಂಗೇರಿ ಗ್ರಾಮದಲ್ಲಿ ಚಿನ್ನತಪ್ಪ ಉತ್ಸವ ತಾ. 19 ರಿಂದ ನಡೆಯಲಿದ್ದು, ಉತ್ಸವಕ್ಕೆ ಗ್ರಾಮದ ಜನತೆ ಸಜ್ಜಾಗುತ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ವಿಶಿಷ್ಟ ‘ಚಿನ್ನತಪ್ಪ’ ಹಬ್ಬದಲ್ಲಿ ಶ್ರೀಕೃಷ್ಣನದು ಎನ್ನಲಾದ ಕೊಳಲಿಗೆ ವಿವಿಧ ವಿಧಿ ವಿಧಾನದೊಂದಿಗೆ ಪೂಜೆ ಸಲ್ಲಿಸುವದೇ ವಿಶೇಷತೆಯಾಗಿದೆ.

ಅಯ್ಯಂಗೇರಿಯಲ್ಲಿ ವರ್ಷಕ್ಕೊಮ್ಮೆ ನಡೆಯುವ ‘ಚಿನ್ನತಪ್ಪ’ ಹಬ್ಬದಿಂದ ಊರು ಜನಮನ ಸೆಳೆದಿದೆ. ಜಿಲ್ಲೆಯಲ್ಲಿಯೇ ಏಕೈಕ ಕೃಷ್ಣ ದೇಗುಲವಿರುವ ಗ್ರಾಮ ಎಂಬ ಹೆಗ್ಗಳಿಕೆಯೂ ಇಲ್ಲಿಗಿದೆ. ಗೊಲ್ಲ ಜನಾಂಗದವರು ನಡೆಸುವ ಈ ಹಬ್ಬ, ಪ್ರತಿವರ್ಷ ಬೇಸಿಗೆಯಲ್ಲಿ ಮೂರು ದಿನಗಳ ಕಾಲ ವಿವಿಧ ಸಂಪ್ರದಾಯದೊಂದಿಗೆ ನೆರವೇರುತ್ತದೆ.

ಇಲ್ಲಿ ವರ್ಷಕ್ಕೊಮ್ಮೆ ನಡೆಯುವ ಹಬ್ಬದಲ್ಲಿ ಕೊಳಲನ್ನು ಎತ್ತಿಕೊಳ್ಳುವವನಿಗೆ ಶ್ರೀಕೃಷ್ಣ ಪರಮಾತ್ಮ ಧರಿಸುವ ಆಭರಣ ತೊಡಿಸಲಾಗುವದು. ಎತ್ತು ಪೋರಾಟದ ಎತ್ತುಗಳನ್ನು ಗದ್ದೆಯಲ್ಲೇ ಮೂರು ಸುತ್ತು ಓಡಿಸುತ್ತಾರೆ. ಬಿಳಿ ಸೀರೆ ಉಟ್ಟ ಹದಿನಾರು ಕುಟುಂಬದ ಮಹಿಳೆಯರು ಚೆಂಬುಚೆರ್ಕ್ ಒಪ್ಪಿಸುವ ಪದ್ಧತಿ ಇದೆ. ಇಲ್ಲಿ ಗೊಲ್ಲ ಜನಾಂಗದವರೇ ಪೂಜೆಯನ್ನು ಮಾಡುವ ಸಂಪ್ರದಾಯ ಬೆಳೆದು ಬಂದಿದೆ.

ಪ್ರತಿವರ್ಷ ಬೆಳಗ್ಗಿನ ಹಬ್ಬದೊಂದಿಗೆ ಆರಂಭಗೊಳ್ಳುವ ಉತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ಧಾರೆ ಪೂಜೆ, ಪಟ್ಟಣಿ ಹಬ್ಬ, ಕತ್ತಲಾವರಿಸಿದ ನಂತರ ಆರಂಭಗೊಳ್ಳುವ ಪೂಜೆ ಬೆಳಗಿನ ಜಾವ ಎರಡು ಗಂಟೆಯವರೆಗೆ ಜರುಗುತ್ತದೆ. ಮರುದಿನ ಜರುಗುವ ಪಟ್ಟಣಿ ಹಬ್ಬವನ್ನು ವೀಕ್ಷಿಸಲು ಅಸಂಖ್ಯಾತ ಭಕ್ತರು ಸೇರುತ್ತಾರೆ. ಊರ ಮಂದ್‍ನಲ್ಲಿ ಅಶ್ವತ್ಥ ವೃಕ್ಷದ ಕೆಳಗೆ ಶ್ರೀಕೃಷ್ಣನನ್ನು ಪೂಜಿಸುವದರೊಂದಿಗೆ ವಿಶೇಷ ಸಾಂಸ್ಕøತಿಕ ಚಟುವಟಿಕೆಗಳು ನಡೆಯುತ್ತವೆ. ಕೆಲವು ಹಿರಿಯರ ಪ್ರಕಾರ ಶ್ರೀಕೃಷ್ಣ ಇಲ್ಲಿಗೆ ಬಂದಾಗ ತನ್ನ ಮೆಚ್ಚಿನ ಕೊಳಲನ್ನು ಬಿಟ್ಟು ಹೋದನಂತೆ. ಆ ಕೊಳಲನ್ನು ಶ್ರೀಕೃಷ್ಣನ ನೆನಪಿನಲ್ಲಿ ಆ ಊರವರು ಜೋಪಾನವಾಗಿ ಕಾಯ್ದಿರಿಸಿ ಪೂಜಿಸುತ್ತಾ ಬಂದರಂತೆ. ಹಬ್ಬದ ದಿನ ಎತ್ತು ಪೋರಾಟ ನಡೆಯುತ್ತದೆ. ಉತ್ಸವದಂದು ಆಕಾಶದಲ್ಲಿ ಅಪರೂಪಕ್ಕೆ ಹದ್ದು ಕಾಣಿಸಿಕೊಳ್ಳುತ್ತದೆ.

ಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಲು ಪಟ್ಟಣಿ ಹಬ್ಬದಂದು ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಆ ದಿನ ಒಂದೊಂದು ಕುಟುಂಬದಿಂದ ಒಬ್ಬೊಬ್ಬ ಮಹಿಳೆ ಶ್ವೇತ ವಸ್ತ್ರ ಧರಿಸಿ ಹರಿವಾಣದಲ್ಲಿ ಹೂ, ಅಕ್ಕಿ ದೀಪ ಹಿಡಿದು ಪಟ್ಟಣಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಹೊಳೆಯಲ್ಲಿ ಮೀನಿಗೆ ಅಕ್ಕಿ ಹಾಕುವ ಪದ್ಧತಿ ನಡೆಯಲಿದೆ.

- ಸುನಿಲ್ ಕುಯ್ಯಮುಡಿ