ಮಡಿಕೇರಿ, ಫೆ.21: ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕನಿಷ್ಠ ಒಂದು ಎಕರೆ ಭೂಮಿ ಒದಗಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಕಲ್ಪಿಸಬೇಕಿದೆ. ಅಂಬೇಡ್ಕರ್ ಭವನ ಎಲ್ಲರಿಗೂ ಉಪಯೋಗವಾಗು ವಂತಾಗಬೇಕು. ಈ ನಿಟ್ಟಿನಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸುವಂತೆ ಸಂಬಂಧಪಟ್ಟ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲೆಯ ಹತ್ತು ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಭೂಮಿ ಒದಗಿಸುವಂತೆ ಹೇಳಿದರು.

ಭಾಗಮಂಡಲ, ಸಂಪಾಜೆ, ಸೋಮವಾರಪೇಟೆ, ಕೊಡ್ಲಿಪೇಟೆ, ಶನಿವಾರಸಂತೆ, ಸುಂಟಿಕೊಪ್ಪ, ಶ್ರೀಮಂಗಲ ಹೋಬಳಿ ಕೇಂದ್ರಗಳಲ್ಲಿ ಕೂಡಲೇ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಸಂಬಂಧಪಟ್ಟ ಕಂದಾಯ ನಿರೀಕ್ಷಕರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಗಾಂಧಿ ಭವನ, ಅಂಬೇಡ್ಕರ್ ಭವನಗಳಿಗೆ ಹಾಗೆಯೇ ವಿದ್ಯಾರ್ಥಿ ನಿಲಯಗಳಿಗೆ ಜಾಗ ಒದಗಿಸಲು ಹೆಚ್ಚಿನ ಕಾಳಜಿ ವಹಿಸುವಂತೆ, ಬೆಳೆ ಪರಿಹಾರಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಬಾಕಿ ಇರುವ ಅದಾಲತ್‍ನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ತಹಶೀಲ್ದಾರರಾದ ಕುಸುಮ, ಮಹದೇವಸ್ವಾಮಿ, ಕೃಷ್ಣ ಅವರು ಹಲವು ಮಾಹಿತಿ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ರಾಮಪ್ಪ ಅವರು ಕೃಷಿ ಇಲಾಖೆಗಳ ಕಾರ್ಯ ಕ್ರಮಗಳು ಹಾಗೂ ರೈತ ಸಂಪರ್ಕ ಕೇಂದ್ರಗಳಿಗೆ ಜಾಗ ಒದಗಿಸು ವಂತೆ ಕೋರಿದರು. ಆಹಾರ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ್ ನಾಯಕ್, ಜಿ.ಪಂ. ಸಹಾಯಕ ಕಾರ್ಯದರ್ಶಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕÀ ಬಿ.ಆರ್. ಗಿರೀಶ್ ಇತರರು ತಮ್ಮ ಇಲಾಖಾ ವ್ಯಾಪ್ತಿಯ ಮಾಹಿತಿ ನೀಡಿದರು.