ಸುಂಟಿಕೊಪ್ಪ, ಮಾ. 6 : ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್‍ಡಿಎಂಸಿ ಸದಸ್ಯರಿಗೆ ಎರಡು ದಿನಗಳ ಕಾಲ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸ ಲಾಗಿತ್ತು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿವಿಧ ಸೌಲಭ್ಯಗಳನ್ನು ಒದಗಿಸುವದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರ್ಪಡೆಗೊಳಿಸುವ ದಿಸೆಯಲ್ಲಿ ಎಸ್‍ಡಿಎಂಸಿ ಸದಸ್ಯರು ಹೆಚ್ಚಿನ ಗಮನಹರಿಸಬೇಕು ಎಂದು ಮುಖ್ಯೋಪಾಧ್ಯಾಯರು ಬಾಲಕೃಷ್ಣ ಈ ಸಂದರ್ಭ ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರೌಢಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸೋಮಯ್ಯ ಮಾತನಾಡಿ, ಎಸ್‍ಡಿಎಂಸಿ ಸದಸ್ಯರು ಶಿಕ್ಷಕ ರೊಂದಿಗೆ ಸೇರಿ ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕು ಎಂದರು.

ಕಾರ್ಯಾಗಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಿಆರ್‍ಪಿ ನಿರ್ಮಲಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನೆ, ಅಧಿಕಾರ ಹಾಗೂ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು.