ಕುಶಾಲನಗರ, ಮಾ. 8: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಕ್ರಮಕೈಗೊಂಡಿದ್ದಾರೆ. ಕೂಡಿಗೆಯ 15 ವರ್ಷ ಪ್ರಾಯದ ವಿದ್ಯಾರ್ಥಿನಿ ಯೋರ್ವಳನ್ನು ಕೂಡಿಗೆ ಕೋಳಿ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಭಿ (22) ಎಂಬಾತ ಚಿಕ್ಕಮಗಳೂರಿಗೆ ಅಪಹರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ವಿದ್ಯಾರ್ಥಿನಿಯನ್ನು ಈ ಯುವಕ ತಾ. 3 ರಂದು ಅಪಹರಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ಠಾಣಾಧಿಕಾರಿ ಜೆ.ಇ. ಮಹೇಶ್ ಮತ್ತು ಠಾಣೆಯ ಅಪರಾಧ ಪತ್ತೆದಳದ ಸಿಬ್ಬಂದಿಗಳು ಯುವಕನನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದು ಬಾಲಕಿಯನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.