ಮಡಿಕೇರಿ, ಮಾ. 9: ಮಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ಕೊಡಗಿನ ಸೋಮೆಯಂಡ ಪಿ. ಚಂಗಪ್ಪ ಅವರು ಮಂಗಳೂರು ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಸತತ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಮೂರು ಬಾರಿ ಆಯ್ಕೆ ಆಗಿದ್ದ ಅವರು ಒಂದು ಅವಧಿಗೆ ವಿವಿಯ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರು, ಕಾರ್ಯಾಧ್ಯಕ್ಷರೂ ಆಗಿದ್ದು, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿರುವ ಇವರು, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟದ ನೇತೃತ್ವ ವಹಿಸಿದ್ದಾರೆ.