ಸಿದ್ದಾಪುರ, ಏ. 23: ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಮೇ 5 ರಂದು ನಡೆಯುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ವಿಪುಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರಿಂದ ಮಾಹಿತಿ ಪಡೆದರು.

ಈ ಸಂದರ್ಭ ‘ಶಕ್ತಿ’ಯೊಂದಿಗೆ ಮಾತನಾಡಿದ ಐಜಿಪಿ ಜಿಲ್ಲೆಯಲ್ಲಿ ಯಾವದೇ ರೀತಿಯ ನಕ್ಸಲ್ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಎಲ್ಲಾ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಈಗಾಗಲೇ ಇರುವ ಪೊಲೀಸ್ ಗಸ್ತುಗಳ ಬಗ್ಗೆ ಪರಿಶೀಲಿಸಿ, ಪ್ರತಿ ಗ್ರಾಮಗಳಲ್ಲಿ ಬೀಟ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು ಯಾವದಾದರು ಅಹಿತಕರ ಘಟನೆಗಳಾಗದಂತೆ ಎಚ್ಚರ ವಹಿಸಿ ತೊಂದರೆಗಳಾದಲ್ಲಿ ಬೀಟ್ ಪೊಲೀಸರೇ ಜವಾಬ್ದಾರರಾಗುತ್ತಾರೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ , ಡಿ.ವೈ.ಎಸ್.ಪಿ ಛಬ್ಬಿ, ಸಿ.ಐ.ಮೇದಪ್ಪ, ಸಿದ್ದಾಪುರ ಠಾಣಾಧಿಕಾರಿ ಸುಬ್ರಹ್ಮಣ್ಯ ಹಾಜರಿದ್ದರು.

-ಚಿತ್ರ, ವರದಿ: ವಾಸು ಆಚಾರ್ಯ