ಮಡಿಕೇರಿ, ಏ. 26: ಡಾ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳ್ಳಲು ಅವಕಾಶ ನೀಡುವದಿಲ್ಲವೆಂದು ಕೊಡಗಿನಲ್ಲಿ ಸುಳ್ಳು ಹೇಳಿಕೆ ನೀಡುವ ಬದಲು ದೆಹಲಿಯಲ್ಲಿ ಈ ಕುರಿತು ಯಾವ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂಬದನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಸ್ಪಷ್ಟಪಡಿಸಬೇಕೆಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ. ಇ.ರ. ದುರ್ಗಾಪ್ರಸಾದ್ ಒತ್ತಾಯಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸದಾನಂದ ಗೌಡರು ಡಾ| ಕಸ್ತೂರಿ ರಂಗನ್ ವರದಿ ಜಾರಿಯಾಗಲು ಬಿಡುವದಿಲ್ಲವೆಂದು ಕೊಡಗಿನ ಜನರ ಕಣ್ಣಿಗೆ ಮಣ್ಣೆರಚುವ ಸಲುವಾಗಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಕೇರಳ ಮತ್ತು ಮಹಾರಾಷ್ಟ್ರಗಳಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮಾಹಿತಿ ರವಾನಿಸಿಲ್ಲ. ಈಗಲಾದರು ಕೇರಳ ಮಾದರಿಯಲ್ಲಿ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳುವ ಮೂಲಕ ಸದಾನಂದ ಗೌಡರು ಬಿಜೆಪಿಯ ವಚನಭ್ರಷ್ಟತೆಯನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯ ಸಂದರ್ಭ ಬಿಜೆಪಿಯ ಪ್ರಣಾಳಿಕೆಯ ಪ್ರಕಾರ ಅಧಿಕಾರಕ್ಕೆ ಬಂದರೆ ಡಾ| ಕಸ್ತೂರಿರಂಗನ್ ವರದಿಯನ್ನು ಜಾರಿ ಮಾಡಲು ಅವಕಾಶ ನೀಡುವದಿಲ್ಲವೆಂದು ಭರವಸೆ ನೀಡಲಾಗಿತ್ತು. ಈ ಭರವಸೆಯಂತೆ ನಡೆದುಕೊಳ್ಳದ ಬಿಜೆಪಿ ಮುಖಂಡರುಗಳು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನಿಂದ ಏನೂ ಮಾಡಲು ಸಾಧ್ಯವಿಲ್ಲವೆಂದು ಟೀಕಿಸುವ ಬಿಜೆಪಿ ಕೇಂದ್ರದಲ್ಲಿರುವ ತನ್ನ ಸರ್ಕಾರದ ಮೇಲೆ ಪ್ರಭಾವ ಬೀರಿ ವರದಿ ಜಾರಿಯಾಗದಂತೆ ತಡೆಯಬಹುದಾಗಿತ್ತಲ್ಲ ಎಂದು ಇ.ರ. ದುರ್ಗಾಪ್ರಸಾದ್ ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಬಿ. ರಮೇಶ್ ಹಾಗೂ ಎ.ಸಿ. ಸಾಬು ಉಪಸ್ಥಿತರಿದ್ದರು.