ಮಡಿಕೇರಿ, ಮೇ 28: ಅಲ್ಪಸಂಖ್ಯಾತರ ಶ್ರೇಯೋಭಿ ವೃದ್ಧಿಗಾಗಿ ನಾನಾ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ಡಿಸೋಜ ಆದೇಶಿಸಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಇಲಾಖೆಗಳ ಮೂಲಕ ಕಾರ್ಯಕ್ರಮಗಳನ್ನು ಮೀಸಲಿಟ್ಟಿದೆ. ಅವುಗಳಿಗೆ ಕ್ರಿಯಾಯೋಜನೆ ತಯಾರಿಸಿ ಸಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು ಮತ್ತು ಅಧಿಕಾರಿಗಳಿಗೆ ಕೊಟ್ಟಿರುವ ಶೇಕಡವಾರು ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಅವರು ಸಭೆ ನಡೆಸಿದರು.

ಶಾಲಾ ಶೈಕ್ಷಣಿಕ ಸೌಲಭ್ಯ ಹೆಚ್ಚಿಸುವದು, ಸ್ವ ಉದ್ಯೋಗ ಕೈಗೊಳ್ಳಲು ಅನುವು ಮಾಡುವದು, ಗ್ರಾಮೀಣ ವಾಸ ಯೋಜನೆಯಲ್ಲಿ ಸಮಾನ ಪಾಲು ನೀಡುವದು, ಹೀಗೆ ನಾನಾ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದರು.

ಆಯಾಯ ವರ್ಷದಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತಾಗಬೇಕು. ವಿವಿಧ ಇಲಾಖೆಗಳು ಹಾಗೂ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮಗಳಿದ್ದು, ಇವುಗಳು ಹೆಚ್ಚು ಪ್ರಗತಿ ಸಾಧಿಸು ವಂತಾಗಬೇಕು ಎಂದು ಜಿಲ್ಲಾಧಿಕಾರಿ ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಅನುದಾನ ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ತಲಪಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿ.ಪಂ. ಸಿಇಓ ಚಾರುಲತಾ ಸೋಮಲ್ ಅವರು ಮಾತನಾಡಿ, ಅಲ್ಪಸಂಖ್ಯಾತರು, ಹಿಂದುಳಿದವರು, ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಟ್ಟು, ಬಡ ಜನರ ಒಳಿತಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿ.ಸಿ.ಎಂ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಪ್ರಧಾನಮಂತ್ರಿಯವರ 15 ಅಂಶಗಳ ಯೋಜನೆಯಡಿಯಲ್ಲಿ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸುವದು, ಆರ್ಥಿಕ ಚಟುವಟಿಕೆ ಹಾಗೂ ಉದ್ಯೋಗದಲ್ಲಿ ಅವಕಾಶ, ಅಲ್ಪಸಂಖ್ಯಾತರ ಜೀವನ ಮಟ್ಟವನ್ನು ಉತ್ತಮಪಡಿಸುವದು, ಒಳಗೊಂಡಂತೆ ಅಲ್ಪಸಂಖ್ಯಾತರ ಅಭಿವೃದ್ದಿಗೆ ಅವಕಾಶ ಮಾಡಿಕೊಳ್ಳುವಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಮನವಿ ಮಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೇಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸಿ. ನಾಗರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಪ್ರಭು, ಜಿ.ಪಂ. ಇಂಜಿನಿಯರ್ ಮಂಜುನಾಥ್, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಯಲಕ್ಷ್ಮಿ ಬಾಯಿ, ಬಿಸಿಎಂ ಇಲಾಖೆಯ ವ್ಯವಸ್ಥಾಪಕ ಪುಟ್ಟರಾಜು, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇತರರು ಮಾಹಿತಿ ನೀಡಿದರು.