ವೀರಾಜಪೇಟೆ, ಮೇ. 29 : ಇಲ್ಲಿಗೆ ಸಮೀಪದ ಆರ್ಜಿ ಗ್ರಾಮ ಪಂಚಾಯಿತಿಯಿಂದ ಇಂದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡ ಲಾಯಿತು.ಸ್ವಚ್ಛತಾ ಅಭಿಯಾನದ ಪ್ರಯುಕ್ತ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರುಂಬಾಡಿ, ಆರ್ಜಿ, ಕಲ್ಲುಬಾಣೆ ಗ್ರಾಮಗಳಲ್ಲಿ ರಸ್ತೆ ಬದಿಯ ಕಸ ಕಡ್ಡಿಗಳನ್ನು ತೆಗೆದು ಶುಚಿಗೊಳಿಸಲಾಯಿತು.ಕೊಡಗು ಕೇರಳ ಗಡಿ ಪ್ರದೇಶವಾದ ಪೆರುಂಬಾಡಿಯಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕವಾಗಿರುವದರಿಂದ ಅಲ್ಲಿಯೂ ಪ್ರವಾಸಿಗರಿಗೆ ಶುಚಿತ್ವ ಕಾಪಾಡುವಂತೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್. ವಿ. ಗಾಯತ್ರಿ ಮಾತನಾಡಿ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಶುಚಿತ್ವ ಕಾಪಾಡಲು ಆಗ್ಗಿಂದಾಗೆ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗುವದು. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‍ಅನ್ನು ಪೂರ್ಣವಾಗಿ ನಿಷೇಧಿಸಿರುವದಾಗಿಯೂ ಶುಚಿತ್ವ ಹಾಗೂ ಪ್ಲಾಸ್ಟಿಕ್ ನಿಷೇಧಕ್ಕೆ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು. ಸ್ವಚ್ಛತಾ ಅಭಿಯಾನದಲ್ಲಿ ಪಂಚಾಯಿತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ ವಿ.ಆರ್.ಸುರೇಶ್, ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.