ಮಡಿಕೇರಿ, ಜೂ. 10: ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಜಾರಿಗೊಳಿಸಿರುವ ಮಹತ್ವಾಕಾಂಕ್ಷೆ ಯೋಜನೆಗಳ ಕುರಿತು ಬೃಹತ್ ಎಲ್.ಇ.ಡಿ. ಪರದೆ ಹೊಂದಿರುವ ಮೊಬೈಲ್ ವಾಹನದ ಮೂಲಕ ವಿಶೇಷ ಪ್ರಚಾರ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ ನೀಡಿದರು. ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ನೀಡಿದ ಜಿಲ್ಲಾಧಿಕಾರಿ, ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳು ಹಾಗೂ ಕನ್ನಡ ನಾಡು-ನುಡಿ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸರ್ಕಾರ ಎಲ್ಲಾ ವರ್ಗದ ಜನರಿಗಾಗಿ ಒಂದಲ್ಲ ಒಂದು ಯೋಜನೆಯನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ಇನ್ನಷ್ಟು ಪರಿಣಾಮಕಾರಿಯಾಗಿ ತಲಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ, ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ, ವಿದ್ಯಾಸಿರಿ, ಬಿದಾಯಿ, ರಾಜೀವ್ ಆರೋಗ್ಯ ಭಾಗ್ಯ, ಕೃಷಿ ಭಾಗ್ಯ, ಪಶುಭಾಗ್ಯ, ಕೌಶಲ್ಯ ಅಭಿವೃದ್ಧಿ ಯೋಜನೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳ ಬಗ್ಗೆ ಮಾಹಿತಿ, ಜೊತೆಗೆ ಕನ್ನಡ ನಾಡು, ನುಡಿ ಸಂಬಂಧಿಸಿದಂತೆ ಮಾಹಿತಿ ನೀಡುವ ಅಭಿಯಾನ ಇದಾಗಿದೆ ಎಂದರು.