ಮಡಿಕೇರಿ ಜೂ.14 : ಮಧ್ಯಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್ ಹಾಗೂ ಅಲ್ಲಿನ ಸರಕಾರÀ ಕಾಂಗ್ರೆಸ್ ನಾಯಕರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಖಂಡಿಸುವದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ಎ.ಶಾಫಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಸಂತ್ರಸ್ತ ರೈತರನ್ನು ಭೇಟಿ ಮಾಡಲು ತೆರಳಿದ ಕಾಂಗ್ರೆಸ್‍ನ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೀನಾಕ್ಷಿ ನಟರಾಜನ್ ಅವರÀನ್ನು ಪೊಲೀಸರು ವಶಕ್ಕೆ ಪಡೆಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ನಂತರ ಹಾವೇರಿ ಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿತು. ದುರ್ಬಲರು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲದ ಬಿಜೆಪಿ ಇದೀಗ ರಾಜ್ಯದ ಜನರ ಕಣ್ಣೊರೆಸುವ ತಂತ್ರವಾಗಿ ‘ಬಿಜೆಪಿ ನಡಿಗೆ ದಲಿತರ ಮನೆಗೆ’ ಎನ್ನುವ ಅಭಿಯಾನವನ್ನು ಆರಂಭಿಸಿದೆ ಎಂದು ಶಾಫಿ ಆರೋಪಿಸಿದ್ದಾರೆ.