ಮಡಿಕೇರಿ, ಜೂ. 20: ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಏಕಾಗ್ರತೆ ಅನಿವಾರ್ಯವೆಂದು ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಕಾರ್ಯದರ್ಶಿ ಶ್ರೀ ಬೀತಿ ಅರಾನಂದ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ರಾಮಕೃಷ್ಣ ಆಶ್ರಮದ ವತಿಯಿಂದ ಸಮೀಪದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಂಡೀಗಡದ ರಾಮಕೃಷ್ಣ ಆಶ್ರಮದ ಗುರುಕೃಪಾನಂದ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮಿಕ ಕ್ಷೇತ್ರದಲ್ಲಿ ಉಂಟಾದ ಸಾಧನೆಗಳು ಸಮಾಜದ ಬೆಳವಣಿಗೆಗೆ ಪೂರಕವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಎಂ. ಭವಾನಿ ವಹಿಸಿದ್ದರು. ವಿದ್ಯಾರ್ಥಿಗಳಾದ ತಸ್ಲೀಮ ಹಾಗೂ ಚೈತ್ರ ಪ್ರಾರ್ಥಿಸಿದರು. ಉಪನ್ಯಾಸಕ ಪಿ.ಆರ್. ಶಿವದಾಸ್ ಸ್ವಾಗತಿಸಿ, ಉಪನ್ಯಾಸಕಿ ಎಂ.ಬಿ. ಪಾರ್ವತಿ ವಂದಿಸಿದರು.