ಕುಶಾಲನಗರ, ಜೂ 21: ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಸಂದರ್ಭ ಪಾಕಿಸ್ತಾನ ಪರ ಜಯಕಾರ ಹಾಕಿದ ದೇಶದ್ರೋಹಿಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೂಡಿಗೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಕೂಡಿಗೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ದೇಶಕ್ಕೆ ಅಪಮಾನ ಎಸಗಿದವರನ್ನು ಕೂಡಲೇ ಗಡಿಪಾರು ಮಾಡಬೇಕಿದೆ. ಆರ್‍ಎಸ್‍ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಚಿವ ರಮಾನಾಥ್ ರೈ ಬಂಧನಕ್ಕೆ ಆದೇಶಿಸಿರುವ ಕ್ರಮವನ್ನು ಖಂಡಿಸಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಕೂಡುಮಂಗಳೂರು ಗ್ರಾಮಪಂಚಾಯ್ತಿ ಸದಸ್ಯ ಭಾಸ್ಕರ್ ನಾಯಕ್, ತಾಲೂಕು ಪಂಚಾಯ್ತಿ ಸದಸ್ಯ ಗಣೇಶ್, ಪ್ರಮುಖರಾದ ಭೋಗಪ್ಪ, ಮಂಜುನಾಥ್, ಕಿರಣ್, ವರದ, ಲಕ್ಷ್ಮಿನಾರಾಯಣ, ನವನೀತ್ ಇದ್ದರು.