ಮಡಿಕೇರಿ, ಜೂ. 24: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಪರ ಸರಕಾರ ಎಂದು ಸಾಬೀತುಪಡಿಸಿದೆ. ಕೇಂದ್ರ ಸರಕಾರ ಕೂಡ ತನ್ನ ಜವಾಬ್ದಾರಿಯನ್ನು ಪ್ರದರ್ಶಿಸುವ ಮೂಲಕ ರೈತರ ಸಾಲ ಮನ್ನಾ ಮಾಡಲಿ ಎಂದು ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ರೂ. 50 ಸಾವಿರ ಸಾಲ ಮನ್ನಾ ಮಾಡುವ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿದೆ. ಕಳೆದ 3-4 ವರ್ಷಗಳಿಂದ ಬರದಿಂದ ತತ್ತರಿಸಿರುವ ರಾಜ್ಯದ ರೈತರಲ್ಲಿ ಆತ್ಮಸ್ಥೈರ್ಯ ತುಂಬಿರುವ ಸರಕಾರ ವಿರೋಧ ಪಕ್ಷಗಳಿಗೆ ಸರಿಯಾದ ಉತ್ತರವನ್ನೇ ನೀಡಿದೆ.

ಕೇಂದ್ರದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಯುಪಿಎ ಸರಕಾರ ರೈತರ ಸಾಲ ಮನ್ನಾ ಮಾಡಿತ್ತು. ಆದರೆ ಈಗಿನ ಎನ್‍ಡಿಎ ನೇತೃತ್ವದ ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡದೆ ಬಂಡವಾಳಶಾಹಿಗಳ ಪರವಾದ ನಿರ್ಧಾರಗಳನ್ನಷ್ಟೇ ಕೈಗೊಳ್ಳುತ್ತಿದೆ ಎಂದು ಹನೀಫ್ ಆರೋಪಿಸಿದ್ದಾರೆ.

ರಾಜ್ಯದ ಬಿಜೆಪಿ ಸಂಸದರು, ಶಾಸಕರು ಹಾಗೂ ಬಿಜೆಪಿ ನಾಯಕರುಗಳು ರೈತರ ಸಮಸ್ಯೆಗಳನ್ನೇ ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳದೆ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲ ಮನ್ನಾಕ್ಕೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಿ ಎಂದು ಅವರು ಒತ್ತಾಯಿಸಿದ್ದಾರೆ.