ಮಡಿಕೇರಿ, ಜೂ. 28 : ಪ್ರತಿಯೊಬ್ಬರೂ ಜೀವ ವಿಮೆ ಮಾಡಿಸುವಂತೆ ಬೆಳೆಗಳಿಗೂ ಸಹ ವಿಮೆ ಮಾಡಿಸುವದು ಅತ್ಯಗತ್ಯ. ಈ ನಿಟ್ಟಿನಲ್ಲಿ ಬೆಳೆ ವಿಮೆ ಯೋಜನೆಯಡಿ ಹೆಸರು ನೋಂದಾಯಿಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹವಾಮಾನ ಆಧಾರಿತ ಬೆಳೆ ವಿಮೆ ಅನುಷ್ಠಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ (ಕಾಳುಮೆಣಸು ಮತ್ತು ಅಡಿಕೆ) ವಿಮೆಗೆ ಹೆಸರು ನೋಂದಾಯಿಸಲು ಜೂನ್ 30 ಕಡೆ ದಿನವಾಗಿದೆ. ಹಾಗೆಯೇ ಪ್ರಧಾನಮಂತ್ರಿ ಫಸಲ್ ಭೀಮಾ (ಭತ್ತ, ಮುಸುಕಿನ ಜೋಳ) ಯೋಜನೆಯಡಿ ಹೆಸರು ನೋಂದಾಯಿಸಲು ಜುಲೈ 15 ಕೊನೆಯ ದಿನವಾಗಿದೆ. ಆದ್ದರಿಂದ ಈ ಬಗ್ಗೆ ತಮ್ಮ ವ್ಯಾಪ್ತಿಯ ರೈತರಿಗೆ ಮಾಹಿತಿ ನೀಡಿ ಹೆಸರು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಾಲೂಕು ಮಟ್ಟದಲ್ಲಿ ಮಾಹಿತಿ ಶಿಬಿರ ಆಯೋಜಿಸಿ, ಅಧಿಕಾರಿಗಳಿಗೆ ನೀಡುವದರ ಜೊತೆಗೆ ರೈತರಲ್ಲಿ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸರ್ಕಾರದ ಯೋಜನೆಗಳು ಸಫಲವಾಗಲು ರೈತರಲ್ಲಿ ಹುರಿದುಂಬಿಸುವ ಕೆಲಸವಾಗಬೇಕು. ಈ ಸಂಬಂಧ ಕರಪತ್ರ ಮುದ್ರಣ ಮಾಡಿ ಮಾಹಿತಿ ಒದಗಿಸುವಂತೆ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಬಿ.ಆರ್. ಗಿರೀಶ್ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ, ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಮಾಹಿತಿ ನೀಡಿದರು.

ಅದರಂತೆ ಕೊಡಗು ಜಿಲ್ಲೆಯಲ್ಲಿ ಈ ಯೋಜನೆಯನ್ನು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಅಡಿಕೆ (ಭಾಗಮಂಡಲ, ಸಂಪಾಜೆ, ಅಮ್ಮತ್ತಿ, ಪೊನ್ನಂಪೇಟೆ ಮತ್ತು ಶ್ರೀಮಂಗಲ) ಮತ್ತು ಕಾಳುಮೆಣಸು ಬೆಳೆಗೆ ಜಿಲ್ಲೆಯ 16 ಹೋಬಳಿ ವ್ಯಾಪ್ತಿಯ ಬೆಳೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಳೆವಾರು ರೈತರ ವಿವರಗಳನ್ನು ಆನ್‍ಲೈನ್ ಪೋರ್ಟಲ್ (sಚಿmಡಿಚಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ) ಮೂಲಕ ನೋಂದಾಯಿಸಬಹುದಾಗಿದೆ. ಕೊಡಗು ಜಿಲ್ಲೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಜಿಐಸಿ, ಲಿಮಿಟೆಡ್ ಅಧಿಕೃತ ವಿಮಾ ಸಂಸ್ಥೆಯಾಗಿದೆ. ರೈತರು ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅಗತ್ಯ ಮಾಹಿತಿ ನೀಡಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಕೋರಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ರಾಮಪ್ಪ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ವರ್ಷದ ಭತ್ತ ಬೆಳೆ ವಿಮೆ ಪಾವತಿಸಲು ಸಂಬಂಧಿಸಿದ ವಿಮಾ ಕಂಪೆನಿಗೆ ಸುಮಾರು 27 ಲಕ್ಷ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ರೈತರು ವಿಮೆ ಸಂಬಂಧ ಭತ್ತ, ನೀರಾವರಿ, ಎಕರೆಗೆ 680 ರೂ., ಹೆಕ್ಟೇರ್‍ಗೆ 1,700 ರೂ., ಭತ್ತ ಮಳೆಯಾಶ್ರಿತ ಎಕರೆಗೆ 430 ರೂ., ಹೆಕ್ಟೇರ್‍ಗೆ 1080 ರೂ., ಮುಸುಕಿನ ಜೋಳ ಮಳೆಯಾಶ್ರಿತ ಎಕರೆಗೆ 400 ರೂ., ಹೆಕ್ಟೇರ್‍ಗೆ 1,000 ರೂ. ವಿಮಾ ಪ್ರೀಮಿಯಂ ಮೊತ್ತ ಪಾವತಿಸಬೇಕಿದೆ ಎಂದು ತಿಳಿಸಿದರು.

ಸಹಕಾರ ಇಲಾಖೆಯ ಉಪ ನಿಬಂಧಕ ವಿಜಯ್ ಕುಮಾರ್, ಡಿಸಿಸಿ ಬ್ಯಾಂಕ್ ಕಾರ್ಯದರ್ಶಿ ಮಾಹಿತಿ ನೀಡಿದರು. ಕೃಷಿ ಪತ್ತಿನ ಸಹಕಾರ ಸಂಘದ ಸಿಇಓಗಳು ಮಾತನಾಡಿ, ಹವಾಮಾನ ಆಧಾರಿತ ಬೆಳೆ ವಿಮೆ ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಮಾಹಿತಿ ಕೊರತೆಯಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಬೇಕಿದೆ ಎಂದು ಕೋರಿದರು. ಹಾಗೆಯೇ ರೈತರು ವಿಮೆ ಮಾಡಿಸಲು ಮುಂದೆ ಬರುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.