ಮಡಿಕೇರಿ, ಜು. 4: ಕೆಪಿಸಿಸಿ ವತಿಯಿಂದ ಕೊಡಗು ಜಿಲ್ಲೆ ಸೇರಿದಂತೆ ಮಂಗಳೂರು ವಲಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ತಾ. 7 ರಂದು ಮಂಗಳೂರಿನಲ್ಲಿ ನಡೆಯುತ್ತಿರುವದರಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ತಾ. 7 ಕ್ಕೆ ಬದಲಾಗಿ ತಾ. 10 ರಂದು ಮಡಿಕೇರಿ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸಮಾವೇಶ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆಯ ಮಂಗಳೂರು ವಲಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಮಾವೇಶ ಮಂಗಳೂರಿನಲ್ಲಿ ತಾ. 7 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ದಿನೇಶ್ ಗುಂಡೂರಾವ್ ಹಾಗೂ ಎಸ್.ಆರ್. ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ವಿ.ಪಿ. ಸುರೇಶ್ ತಿಳಿಸಿದ್ದಾರೆ.

ಈ ಸಮಾವೇಶದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲೆಗೆ ಸಂಬಂಧಪಟ್ಟ ಕೆಪಿಸಿಸಿ ಪದಾಧಿಕಾರಿಗಳು, ಸಂಸದರು, ಶಾಸಕರುಗಳು, 2013ರ ವಿಧಾನಸಭಾ ಚುನಾವಣೆ ಮತ್ತು 2014ರ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳು, ಮಾಜಿ ಸಂಸದರು, ಶಾಸಕರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾಯಿತ ಸದಸ್ಯರುಗಳು, ಪಕ್ಷದ ಮುಂಚೂಣಿ ಘಟಕ, ವಿಭಾಗ ಮತ್ತು ಸೆಲ್‍ಗಳ ಪ್ರಧಾನರು, ಪದಾಧಿಕಾರಿಗಳು, ಸಂಬಂಧಪಟ್ಟ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿ.ಪಿ. ಸುರೇಶ್ ತಿಳಿಸಿದ್ದಾರೆ.