ಕುಶಾಲನಗರ, ಜು. 13: ಸಮರ್ಪಕ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಪ್ರತಿನಿಧಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸ ವಿಲೇವಾರಿಗೊಳಿಸಲು ಜಿಲ್ಲಾಡಳಿತ ಸೂಕ್ತ ಸ್ಥಳಾವಕಾಶ ಗುರುತಿಸಿ ಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಆಡಳಿತ ಮಂಡಳಿ ಪದಾಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸತ್ಯಾಗ್ರಹ ಕೈಗೊಂಡಿದ್ದು ಗುರುವಾರ ಮೂವರು ಸದಸ್ಯರು ಅಸ್ವಸ್ಥರಾದ ಘಟನೆ ನಡೆದಿದೆ.

ಗುರುವಾರ ಬೆಳಗ್ಗೆ ತೀವ್ರ ಅಸ್ವಸ್ಥಗೊಂಡ ಪಂಚಾಯ್ತಿ ಸದಸ್ಯರಾದ ಹರೀಶ್, ಸಂತೋಷ್ ಹಾಗೂ ಜಯಮ್ಮ ಎಂಬವರಿಗೆ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು.

ಸತ್ಯಾಗ್ರಹ ಆರಂಭಿಸಿ 24 ಗಂಟೆ ಕಳೆದರೂ ಯಾವದೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸಮಸ್ಯೆ ಆಲಿಸಲು ಮುಂದಾಗಿಲ್ಲ ಎಂದು ಪ್ರತಿಭಟ ನಾಕಾರರು ಆಕ್ರೋಶÀ ವ್ಯಕ್ತಪಡಿಸಿದರು.

ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಸುದ್ದಿಗಾರರೊಂದಿಗೆ ಮಾತನಾಡಿ,

ಜಿಲ್ಲೆಯಲ್ಲಿಯೇ ಅತಿ ದೊಡ್ಡ ಪಂಚಾಯಿತಿಯಾಗಿರುವ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆದೋರಿರುವದಕ್ಕೆ ಜಿಲ್ಲಾಡಳಿತ ಮತ್ತು ಅಧಿಕಾರಿಗಳೇ ಕಾರಣ. ಗುಮ್ಮನಕೊಲ್ಲಿಯಲ್ಲಿ ಕಸ ವಿಲೇವಾರಿಗೊಳಿಸಲು ಸೂಚಿಸಿರುವ 5/1 ರಲ್ಲಿನ 1 ಎಕರೆ ಪ್ರದೇಶವನ್ನು ಪಂಚಾಯಿತಿ ಸುಪರ್ದಿಗೆ ವಹಿಸುವ ವರೆಗೂ ಧರಣಿ ಮುಂದುವರೆಯಲಿದೆ ಎಂದು ತಿಳಿಸಿದರು.