ಮಡಿಕೇರಿ, ಜು. 15: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟದ ಫಲವಾಗಿ ದಿಡ್ಡಳ್ಳಿ ನಿರಾಶ್ರಿತರಿಗೆ ಆಶ್ರಯ ದೊರೆತಿದೆ. ಇದೇ ರೀತಿ ಇನ್ನೂ ಅನೇಕ ನಿವೇಶನ ರಹಿತರು ಜಿಲ್ಲೆಯಲ್ಲಿದ್ದು, ಎಲ್ಲರಿಗೂ ಭೂಮಿಯ ಹಕ್ಕು ನೀಡಬೇಕೆಂದು ಒತ್ತಾಯಿಸಿ ಆ. 20 ರಂದು ಮತ್ತೊಂದು ಸುತ್ತಿನ ಹೋರಾಟವನ್ನು ಆರಂಭಿಸುವದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಡಿ.ಎಸ್. ನಿರ್ವಾಣಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯು ದಿಡ್ಡಳ್ಳಿಯಲ್ಲಿ ನಡೆಸಿದ ಹೋರಾಟಕ್ಕೆ ಫಲ ಸಿಕ್ಕಿದ್ದು, ಇತರ ಒಂದು ಸಾವಿರ ನಿವೇಶನ ರಹಿತರಿಗೂ ನಿವೇಶನ ನೀಡಲು ಜಿಲ್ಲಾಡಳಿತ ಮುಂದಾಗಿರುವದು ಮತ್ತು ಇದಕ್ಕಾಗಿ 60 ಏಕರೆ ಭೂಮಿ ಗುರುತಿಸಿರುವದು ಸ್ವಾಗತಾರ್ಹವೆಂದರು. ಆದರೆ, ಚೆರಿಯಪರಂಬು, ಪಾಲೇಮಾಡು, ನಾಗರಹೊಳೆÉ, ಯಡವ ನಾಡು, ಬಾಳೆಗುಂಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿವೇಶನ ರಹಿತರ ಹೋರಾಟಕ್ಕೆ ಇನ್ನೂ ಫಲ ಸಿಕ್ಕಿಲ್ಲ. ಇದೇ ಮಾದರಿಯ 20ಕ್ಕೂ ಹೆಚ್ಚು ಪ್ರಕರಣಗಳು ಜಿಲ್ಲೆಯ ಮೂರು ತಾಲೂಕುಗಳಲ್ಲಿವೆ. ಯಡವನಾಡಿನಲ್ಲಿ 25 ಆದಿವಾಸಿ ಕುಟುಂಬಗಳಿಗೆ ತಲಾ 3 ಎಕರೆ ಭೂಮಿಯನ್ನು ಹಂಚಿಕೆ ಮಾಡಿ, ನಕ್ಷೆ ಕೂಡ ತಯಾರಾಗಿದೆ. ಈ ಜಾಗದಲ್ಲಿ ಆದಿವಾಸಿಗಳು ಗುಡಿಸಲುಗಳನ್ನು ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ. ಸರ್ಕಾರ ನ್ಯಾಯಯುತವಾಗಿ ಗುರುತಿಸಿರುವ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡದಿದ್ದಲ್ಲಿ ಗಿಡಗಳನ್ನು ಕಿತ್ತೆಸೆದು ಗುಡಿಸಲುಗಳನ್ನು ನಿರ್ಮಿಸಿ ಕೊಳ್ಳಬೇಕಾಗುತ್ತದೆ ಎಂದು ನಿರ್ವಾಣಪ್ಪ ಎಚ್ಚರಿಕೆ ನೀಡಿದರು.

ನಿವೇಶನ ರಹಿತರ ಬೇಡಿಕೆಗಳನ್ನು ಮುಂದಿಟ್ಟು, ತಾ. 20 ರಂದು ಜಿಲ್ಲಾ ಮಟ್ಟದ ಸಮಾವೇಶವನ್ನು ರಾಜ್ಯ ವ್ಯಾಪಿ ಹಮ್ಮಿಕೊಳ್ಳಲಾಗುವದೆಂದ ಅವರು, ಸಮಿತಿಯ ಹೋರಾಟವನ್ನು ಹತ್ತಿಕ್ಕಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ ಮಾತನಾಡಿ, ನಿವೇಶನ ರಹಿತರಿಗೆ ಭೂಮಿ ಹಂಚಲು ಎದುರಾಗಿರುವ ವಿವಾದ ಮತ್ತು ಗೊಂದಲವನ್ನು ಬಗೆಹರಿಸಲು ಹೈ ಪವರ್ ಸಮಿತಿಯನ್ನು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿತ್ತು. ಆದರೆ ಈ ಬೇಡಿಕೆ ಇನ್ನೂ ಕೂಡ ಈಡೇರಿಲ್ಲ ವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಆ. 20 ರಂದು ಸಮಿತಿ ರಚನೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವದು ಎಂದರು. ಬಹುಜನ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ಮೊಣ್ಣಪ್ಪ ಮಾತನಾಡಿದರು.

ಗೋಷ್ಠಿಯಲ್ಲಿ ಆದಿವಾಸಿ ಮುಖಂಡ ಸುರೇಶ್, ಚೆರಿಯಪರಂಬುವಿನ ಷರೀಫ್ ಹಾಗೂ ಫೀರ್ ಉಪಸ್ಥಿತರಿದ್ದರು.