ಮಡಿಕೇರಿ, ಜು. 27: ತೋಟಗಾರಿಕೆ ಇಲಾಖೆ ಪರಿಹಾರ ತಂತ್ರಾಂಶದಲ್ಲಿ ಬಾಕಿ ಇರುವ ಬೆಳೆಹಾನಿ ವಿವರವನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗನವಾಡಿಗಳಿಗೆ 15 ದಿನದೊಳಗೆ ಸೂಕ್ತ ಜಾಗವನ್ನು ಗುರುತಿಸುವಂತೆ ಸರ್ವೆ ಅಧಿಕಾರಿಯವರೊಂದಿಗೆ ಸಮಲೋಚನೆ ಮಾಡಿ ಕಂದಾಯ ನಿರೀಕ್ಷಕರು ವರದಿ ನೀಡಿ ಜಾಗವನ್ನು ನೀಡುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಜಾಗ ಒತ್ತುವರಿಯನ್ನು ಗುರುತಿಸಿ ಮೂರು ತಿಂಗಳೊಳಗೆ ಸರ್ಕಾರದ ಸುಪರ್ದಿಗೆ ಪಡೆದುಕೊಂಡು ಸರ್ವೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಕಂದಾಯ ನಿರೀಕ್ಷಕರಿಗೆ ಸಲಹೆ ಮಾಡಿದರು.

ಅಂಬೇಡ್ಕರ್ ಭವನದ ಬಗ್ಗೆ ಸಭೆಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ಅವರು ಮಾಹಿತಿ ನೀಡಿ ಶನಿವಾರಸಂತೆ, ಸೋಮವಾರಪೇಟೆ, ಸುಂಟಿಕೊಪ್ಪ, ನಾಪೋಕ್ಲು, ಅಮ್ಮತ್ತಿ, ಹುದಿಕೇರಿ, ಚೆನ್ನಯ್ಯನ ಕೋಟೆ, ಕುಟ್ಟ, ಕದನೂರು, ಕೊಡ್ಲಿಪೇಟೆಯಲ್ಲಿ ಜಾಗ ಬೇಕಿದೆ ಎಂದರು. ಇದಕ್ಕೆ ಜಿಲ್ಲಾಧಿಕಾರಿಯವರು ಒಂದು ವಾರದಲ್ಲಿ ಜಾಗ ಗುರುತಿಸುವಂತೆ ಕಂದಾಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಸಭೆಗೆ ಹೊಸದಾಗಿ ಕುಶಾಲನಗರದಲ್ಲಿ ಮಂಜೂರಾಗಿರುವ ಮೌಲನಾ ಅಬ್ದುಲ್ ಅಜಾದ್ ಶಾಲೆಗೆ ಜಾಗದ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.

ಯೋಜನಾ ಸಮನ್ವಯಾಧಿಕಾರಿ ಸಭೆಗೆ ತಿತಿಮತಿಯಲ್ಲಿ ಮೊರಾರ್ಜಿ ಶಾಲೆಗೆ, ಆದಿವಾಸಿ ಸಮುದಾಯ ಭವನಕ್ಕೆ 4 ಕೋಟಿ ಮಂಜೂರಾತಿ ದೊರೆತಿದ್ದು, ಒಂದು ಎಕರೆ ಜಾಗದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಇದಕ್ಕೆ ಜಿಲ್ಲಾಧಿಕಾರಿ ಅವರು ಗೋಣಿಕೊಪ್ಪ, ವೀರಾಜಪೇಟೆ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಸಿಗದಿದ್ದರೆ ಖಾಸಗಿಯವರಿಂದ ಖರೀದಿ ಮಾಡುವಂತೆ ಸೂಚಿಸಿದರು.

ಐಟಿಡಿ ಇಲಾಖೆ ಅಧಿಕಾರಿ ಪ್ರಕಾಶ್ ದುಬಾರೆ, ಸಿದ್ದಾಪುರ, ತಿತಿಮತಿ ವ್ಯಾಪ್ತಿಯಲ್ಲಿ ಗಿರಿಜನ ಅಭಿವೃದ್ಧಿ ಯೋಜನೆಯಡಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜಾಗದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಗ್ರಾಮೀಣ ಗೃಹ ನಿರ್ಮಾಣದಲ್ಲಿ ಹಿಂದೆ ಉಳಿದಿದ್ದು, ಮೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸೂಕ್ತ ಕ್ರಮಕೈಗೊಂಡು ವಸತಿ ರಹಿತ ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ನೀಡುವಂತೆ ಸೂಚಿಸಿದರು.

ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ನಿಗದಿಪಡಿಸಿ ವೈಜ್ಞಾನಿಕ ರೀತಿಯಲ್ಲಿ ಬಳಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಬಿತ್ತನೆ ಪೂರ್ಣಗೊಂಡಿದ್ದು, ಭತ್ತದ ನಾಟಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಜಿಲ್ಲೆಯ ಕೆರೆಗಳ ಸರ್ವೆ ಕಾರ್ಯ ಶೀಘ್ರದಲ್ಲಿ ಪ್ರಾರಂಭಿಸುವಂತೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ. ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ತಹಶೀಲ್ದಾರರಾದ ಕುಸುಮ, ಮಹೇಶ್, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗಿರೀಶ್ ಇತರರು ಇದ್ದರು.