ಸಿದ್ದಾಪುರ, ಆ. 2: ಕಸವಿಲೇವಾರಿಗೆ ಜಿಲ್ಲಾಡಳಿತ ಗುರುತಿಸಿದ್ದ ಜಾಗದಲ್ಲಿ ಕಸವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು ವಿರೋಧ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವದೆಂದು ಎಚ್ಚರಿಕೆ ನೀಡಿದ್ದಾರೆ.

ನೆಲ್ಯಹುದಿಕೇರಿ ಗ್ರಾಮದ ಕಸವಿಲೇವಾರಿ ಮಾಡಲು ಸೂಕ್ತ ಜಾಗ ನೀಡಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಬಂದ್ ಮಾಡಿ ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಬರಡಿಯ ಖಾಸಗಿ ತೋಟವೊಂದರಲ್ಲಿ ಒತ್ತುವರಿ ಮಾಡಿದ್ದ ಜಾಗವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದ್ದರು. ಆದರೆ ಬರಡಿ ಜನವಸತಿ ಪ್ರದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಕಸವಿಲೇವಾರಿ ಮಾಡಲು ಬಿಡುವದಿಲ್ಲವೆಂದು ಬರಡಿ ಭಾಗದ ಗ್ರಾ.ಪಂ. ಸದಸ್ಯ ಯೋಗೇಶ್ ಹಾಗೂ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ.ಗೆ ಬುಧವಾರ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಭೇಟಿ ನೀಡಿ ಬರಡಿ ಗ್ರಾಮದಲ್ಲಿ ಕಸವಿಲೇವಾರಿ ಮಾಡಲು ಆದೇಶ ನೀಡಿದ್ದು, ವಿರೋಧ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವದೆಂದು ಎಚ್ಚರಿಕೆ ನೀಡಿದ್ದಾರೆ.