ಸೋಮವಾರಪೇಟೆ,ಆ.3: ಕರ್ನಾಟಕ ಜಾನಪದ ಪರಿಷತ್‍ನ ಸೋಮವಾರಪೇಟೆ ಹೋಬಳಿ ಘಟಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಸಾಹಿತ್ಯ ಘಟಕದ ಆಶ್ರಯದಲ್ಲಿ ತಾ. 5ರಂದು (ನಾಳೆ) ಪೂರ್ವಾಹ್ನ 10.30ಕ್ಕೆ ಇಲ್ಲಿನ ಮಾನಸ ಸಭಾಂಗಣದಲ್ಲಿ ವಿದ್ಯಾರ್ಥಿ ಕವಿಗೋಷ್ಠಿ, ಜಾನಪದ ಗೀತೆಗಾಯನ ಸ್ಪರ್ಧೆ ಮತ್ತು ಜನಪದ ಸಂಸ್ಕøತಿ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಹೋಬಳಿ ಘಟಕದ ಕಾರ್ಯದರ್ಶಿ ಎಂ.ಎ. ರುಬೀನಾ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್‍ನ ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್ ವಹಿಸಲಿದ್ದು, ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಉದ್ಘಾಟಿಸಲಿದ್ದಾರೆ. ಅರಸೀಕೆರೆ ಜೆಎಸ್‍ಎಸ್ ಪದವಿಪೂರ್ವ ಕಾಲೇಜು ಉಪನ್ಯಾಸಕ ಬಿ.ಪಿ. ಸರ್ವಜ್ಞಮೂರ್ತಿ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಚಂದ್ರಮೋಹನ್, ಕರವೇ ಅಧ್ಯಕ್ಷ ದೀಪಕ್, ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಕಸಾಪ ಗೌರವ ಕಾರ್ಯದರ್ಶಿ ಎಸ್.ಡಿ. ವಿಜೇತ್, ರೊಟೇರಿಯನ್ ಬಿ.ಎಸ್. ಶ್ರೀಧರ್ ಅವರುಗಳು ಭಾಗವಹಿಸಲಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿ, ಸಾರ್ವಜನಿಕರಿಗೆ ಜನಪದ ಗೀತೆಗಾಯನ ಸ್ಪರ್ಧೆ ನಡೆಯಲಿದ್ದು, ಪ್ರತಿ ಶಾಲೆಯಿಂದ ಐವರು ವಿದ್ಯಾರ್ಥಿಗಳಿಗೆ ಕವಿಗೋಷ್ಠಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರುಬೀನಾ ತಿಳಿಸಿದ್ದಾರೆ.