ಕೂಡಿಗೆ, ಆ. 3: ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಸ್ವಾಗತ ಕಾರ್ಯಕ್ರಮ ಏರ್ಪಡಿಸಿದ್ದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕ ವೆಂಕಟನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಪ್ರಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು. ಪಿಯುಸಿ ಹಂತ ಹದಿಹರೆಯದಾಗಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಸತ್ಪ್ರಜೆಗಳಾಗಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಹಿರಿಯ ಉಪನ್ಯಾಸಕ ಹಂಡ್ರಂಗಿ ನಾಗರಾಜ್, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಜೀವನ ಹೊಸತಾಗಿರುತ್ತದೆ. ಇವರಿಗೆ ಹಿರಿಯರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡುವ ಉತ್ತಮ ಬಾಂಧವ್ಯ ಬೆಸೆಯುವ ಕಾರ್ಯಕ್ರಮ ಇದಾಗಿದೆ ಎಂದರು.

ಪ್ರಾಂಶುಪಾಲ ಎಂ.ಆರ್. ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ, ಉಪನ್ಯಾಸಕರುಗಳಾದ ಶಿವಕುಮಾರ್, ವೆಂಕಟೇಶ್, ಹೇಮಲತ, ಪಲ್ಲವಿ ಮತ್ತಿತರರು ಇದ್ದರು.