ಮಡಿಕೇರಿ, ಆ.8: ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ತಾ. 10 ರಂದು (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಿ ಜಂತು ಹುಳು ನಿವಾರಣಾ ಮಾತ್ರೆಯನ್ನು ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್ ಮತ್ತು ಆರ್.ಸಿ.ಎಚ್.ಅಧಿಕಾರಿ ಡಾ.ನಿಲೇಶ್ ಮಾಹಿತಿ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಮಕ್ಕಳು ಜಂತುಹುಳು ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಕುಂಠಿತವಾಗಲಿದೆ. ಆದ್ದರಿಂದ ಇದನ್ನು ನಿವಾರಿಸಲು ಜಂತುಹುಳು ನಿವಾರಣಾ ಮಾತ್ರೆಯನ್ನು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ನೀಡÀಬೇಕಿದೆ ಎಂದು ಹೇಳಿದರು.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಶಾಲೆ ಹಾಗೂ ಅಂಗನವಾಡಿಗಳಿಗೆ ಜಂತು ಹುಳು ನಿವಾರಣಾ ಮಾತ್ರೆ ಪೂರೈಕೆ ಯಾಗಲಿದೆ. ಆ ನಿಟ್ಟಿನಲ್ಲಿ ಜಂತುಹುಳು ನಿವಾರಣಾ ಮಾತ್ರೆ ಜಿಲ್ಲೆಯಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಡಾ.ಶಿವಕುಮಾರ್ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್.ಅಧಿಕಾರಿ ಡಾ.ನಿಲೇಶ್ ಅವರು ಮಾಹಿತಿ ನೀಡಿ 2015 ರಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು, ತಾ. 10 ರಂದು ದೇಶದ ಎಲ್ಲಾ ರಾಜ್ಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ವಿಶ್ವದಲ್ಲಿ ಸುಮಾರು 220 ಮಿಲಿಯನ್ ಮಕ್ಕಳು ಜಂತು ಹುಳು ಭಾದೆಯಿಂದ ನರಳುತ್ತಿರುವದು ತಿಳಿದುಬಂದಿದೆ. ಮಕ್ಕಳಲ್ಲಿ ಅಪೌಷ್ಟಿಕತೆ, ಸುಸ್ತು, ಸಂಕಟವು ಜಂತು ಹುಳುವಿನಿಂದ ಉಂಟಾಗಲಿದೆ. ಪ್ರತೀ ಹತ್ತು ಮಕ್ಕಳಲ್ಲಿ ಏಳು ಮಕ್ಕಳು ಅನಿಮಿಯಾದಿಂದ ಬಳಲುತ್ತಿದ್ದಾರೆ.

ಜಂತು ಹುಳು ಭಾಧೆಯಿಂದ ಮಕ್ಕಳ ಬೌದ್ಧಿಕ ಬೆಳವಣಿಗೆ ಕಡಿಮೆಯಾಗಲಿದೆ. ಕಲಿಕೆಯಲ್ಲಿ ಹಿಂದುಳಿಯಲಿದ್ದಾರೆ. ಶಾಲೆಗಳಿಗೆ ಮಕ್ಕಳ ಗೈರು ಹಾಜರಿ ಹೆಚ್ಚಾಗುತ್ತದೆ. ಇದನ್ನು ತಡೆಯಲು ಜಂತುಹುಳು ನಿವಾರಣಾ ಮಾತ್ರೆಯನ್ನು 19 ವರ್ಷದೊಳಗಿನ ಮಕ್ಕಳಿಗೆ ಕೊಡಿಸಬೇಕಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತದೆ. ಜಂತುಹುಳು ಮಾತ್ರೆ ಪಡೆಯುವದರಿಂದ ಮಕ್ಕಳಲ್ಲಿ ಕಲಿಕೆ ಪ್ರಮಾಣ, ದೈಹಿಕ ಬೆಳವಣಿಗೆ ಹೆಚ್ಚಲಿದೆ. ಯಾವದೇ ಅಡ್ಡ ಪರಿಣಾಮ ಬೀರುವದಿಲ್ಲ. ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 1,29,576 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ನೀಡುವ ಗುರಿ ಹೊಂದಲಾಗಿದೆ ಎಂದು ಡಾ.ನಿಲೇಶ್ ತಿಳಿಸಿದರು.

ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯೊಂದಿಗೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಐಟಿಡಿಪಿ, ಪೌರಾಡಳಿತ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಬೇಕಿದೆ ಎಂದು ಹೇಳಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವಿವಿದ್ದೋದ್ದೇಶ ಸಭಾಂಗಣದಲ್ಲಿ ತಾ. 10 ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಸಭಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.