ಮಡಿಕೇರಿ, ಆ. 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ. ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ವನ್ನು ತಾ. 20 ರಂದು ನಗರದಲ್ಲಿ ಆಯೋಜಿಸಲು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಹಿಂದುಳಿದ ವರ್ಗದ ಹರಿಕಾರ ಎಂದೇ ಖ್ಯಾತರಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ವಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗೆ ನಿರ್ದೇಶನ ನೀಡಿದರು.

ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಮುಂತಾದ ಹತ್ತು ಹಲವು ಸಾಮಾಜಿಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಅವರ ಜಯಂತಿ ಆಚರಣೆಗೆ ಎಲ್ಲಾ ಸಂಘ-ಸಂಸ್ಥೆಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಪ್ರಮುಖರಾದ ಕೋಡಿ ಚಂದ್ರಶೇಖರ್ ಮಾತನಾಡಿ, ಜಿಲ್ಲ್ಲೆಯಲ್ಲಿ ವಿವಿಧ ಜನಾಂಗಗಳ ಸಂಘ-ಸಂಸ್ಥೆಗಳನ್ನು ಆಹ್ವಾನಿಸು ವಂತಾಗಬೇಕು. ಅಧಿಕಾರಿಗಳು ಮತ್ತು ಅಧಿಕಾರೇತರರು ಸೇರಿಕೊಂಡು ಸಂಘಟನಾತ್ಮಕವಾಗಿ ಕಾರ್ಯಕ್ರಮವನ್ನು ಆಯೋಜಿಸು ವಂತಾಗಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸು ವಂತೆ ಕೋರಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಟೇಶ್, ಪೊಲೀಸ್ ಇನ್ಸ್‍ಪೆಕ್ಟರ್ ಐ.ಪಿ. ಮೇದಪ್ಪ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಭಾಗ್ಯಲಕ್ಷ್ಮಿ, ತಹಶೀಲ್ದಾರ್ ಕುಸುಮ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಸಿ. ದಯಾನಂದ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು.