ಸೋಮವಾರಪೇಟೆ, ಆ. 18: ಸಮೀಪದ ಐಗೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿರುವ ಪವನ್ ಎಂಬಾತನ ಮೇಲೆ ಅದೇ ಗ್ರಾಮದ ಕವನ್ ಮತ್ತು ಯೋಗೇಶ್ ಅವರುಗಳು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದು, ಇದು ಖಂಡನೀಯ. ತಕ್ಷಣ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ನೇತೃತ್ವದಲ್ಲಿ ನೌಕರರು ಐಗೂರು ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಮೇಲೆ ಆಗಿಂದಾಗ್ಗೆ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಸೌಕರರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಭರತ್ ಆರೋಪಿಸಿದರು.

ಒಕ್ಕೂಟದ ತಾಲೂಕು ಕಾರ್ಯದರ್ಶಿ ಉಮೇಶ್, ಖಜಾಂಚಿ ಹನೀಫ್ ಸೇರಿದಂತೆ ಇತರರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಸ್. ಚಂಗಪ್ಪ, ಉಪಾಧ್ಯಕ್ಷೆ ಕೆ.ಪಿ. ಶೋಭಾ, ಸದಸ್ಯ ಕೆ.ಪಿ. ದಿನೇಶ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.