ಶನಿವಾರಸಂತೆ, ಆ. 20: ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ಅದೆಷ್ಟೋ ಕ್ರೀಡಾ ಪ್ರತಿಭೆಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ಅಭಿಪ್ರಾಯಪಟ್ಟರು.

ಪಟ್ಟಣದ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಪ್ರೌಢಶಾಲಾ ವಿಭಾಗದ ವಲಯಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ. ಸುಬ್ರಹ್ಮಣ್ಯ ಮಾತನಾಡಿ, ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರಗಳಿಂದ ದೇಶದ ಘನತೆ ಹೆಚ್ಚಾಗುತ್ತದೆ ಎಂದರು.

ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಸಿ.ಜೆ. ಗಿರೀಶ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾ.ಪಂ. ಸದಸ್ಯ ಬಿ.ಎಸ್. ಅನಂತಕುಮಾರ್, ಸಂಪನ್ಮೂಲ ವ್ಯಕ್ತಿ ನಿರ್ಮಲಾ, ವಿದ್ಯಾಸಂಸ್ಥೆ ನಿರ್ದೇಶಕ ಲೋಕೇಶ್, ಗಣೇಶ್, ನಿತ್ಯಾನಿಧಿ, ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಶಿಕ್ಷಕ ಜಯಕುಮಾರ್, ವಿವಿಧ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು. ಶನಿವಾರಸಂತೆ ವಲಯ ವ್ಯಾಪ್ತಿಯ 10 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.