*ಗೋಣಿಕೊಪ್ಪಲು, ಆ. 29: ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಫುಟ್‍ಬಾಲ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.

ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಮಂಗಳವಾರ ಕ್ರೀಡಾಕೂಟಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಆಕಾಶಕ್ಕೆ ಬೆಲೂನ್ ಹಾರಿ ಬಿಡುವ ಮೂಲಕ ಪಥ ಸಂಚಲನವನ್ನು ಉದ್ಘಾಟಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಶಶಿಸುಬ್ರಮಣಿ ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು, ಟ್ರೋಫಿ ದಾನಿ ಪೋಡಮಾಡ ಚಿಣ್ಣಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಚಲನ್ ಕುಮಾರ್, ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್, ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಬಾಳೆಲೆ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಸಂಚಾಲಕ ಪೋಡಮಾಡ ಮೋಹನ್, ಅಧ್ಯಕ್ಷೆ ಪ್ರೀತಿ, ಆರ್‍ಎಂಸಿ ಸದಸ್ಯರಾದ ಮಾಚಂಗಡ ಸುಜಾ ಪೂಣಚ್ಚ, ಆದೇಂಗಡ ಚಂಗಪ್ಪ, ವಿಜಯಲಕ್ಷ್ಮಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕೆ.ಪಿ. ಪೊನ್ನಮ್ಮ, ಡಿಡಿಪಿಐ ದಾನೋಜಿ, ಬಿಇಒ ಲೋಕೇಶ್ ಹಾಜರಿದ್ದರು.

ಅಪ್ಪಚ್ಚಕವಿ ವಿದ್ಯಾಲಯದ ವಿದ್ಯಾರ್ಥಿಗಳ ಬ್ಯಾಂಡ್‍ಸೆಟ್, ಪೊನ್ನಂಪೇಟೆ ಸೆಂಟ್ ಅಂಥೋಣಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸ್ವಾಗತ ನೃತ್ಯ, ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಮಕ್ಕಳ ನಾಡಗೀತೆ ಗಮನ ಸೆಳೆಯಿತು.

ಕ್ರೀಡಾಕೂಟದಲ್ಲಿ ಮೈಸೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಚಿಕ್ಕಮಗಳೂರು,ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದರು,

- ಚಿತ್ರ, ವರದಿ : ಎನ್.ಎನ್. ದಿನೇಶ್