ಮಡಿಕೇರಿ, ಸೆ.15: ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ತಾ. 16 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯುವ ಕೆ.ಡಿ.ಪಿ.ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1.15 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಲಕಾವೇರಿ ಜಾತ್ರೆ ಪೂರ್ವಭಾವಿ ಸಭೆ ಹಾಗೂ ಮಧ್ಯಾಹ್ನ 1.45 ಗಂಟೆಗೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 3 ಗಂಟೆಗೆ ರಾಜಾಸೀಟ್ ಉದ್ಯಾನವನದ ಪುಟಾಣಿ ರೈಲು ಪಕ್ಕದಲ್ಲಿರುವ ನಗರಸಭೆಯ ಪಾರ್ಕ್ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಹಾಗೂ ರಾಜಾಸೀಟ್ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3.45 ಗಂಟೆಗೆ ನಗರಸಭೆ ವತಿಯಿಂದ ಸಣ್ಣ ಉದ್ದಿಮೆಯ ಫಲಾನುಭವಿಗಳಿಗೆ ಸಹಾಯಧನ ನೀಡುವದು, ಅಂಗವಿಕಲರಿಗೆ ಹೊಲಿಗೆ ಯಂತ್ರ ವಿತರಣೆ, ಫಲಾನುಭವಿಗಳಿಗೆ ಜೀವವಿಮಾ ಬಾಂಡ್ ನೀಡುವದು ಮತ್ತು ಅಂಗವಿಕಲರಿಗೆ ಮೂರು ಚಕ್ರದ ಸ್ಕೂಟರನ್ನು ನಗರಸಭೆ ಕಚೇರಿ ಆವರಣದಲ್ಲಿ ವಿತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಆ್ಯಂಟನಿ ಮೆಂಡೋನ್ಸಾ ತಿಳಿಸಿದ್ದಾರೆ.