ಸಿದ್ದಾಪುರ, ಸೆ. 23: ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.ನೆಲ್ಯಹುದಿಕೇರಿ ಪಂಚಾಯಿತಿ ಸಭಾಂಗಣದಲ್ಲಿ ಸಿದ್ದಾಪುರ ಠಾಣಾಧಿಕಾರಿ ಕೆ.ಜಿ. ಸುಬ್ರಮಣ್ಯ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಕರೆದಿದ್ದ ಸಭೆಯಲ್ಲಿ ಗ್ರಾಮಸ್ಥರು ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯ ಸಾಬು ವರ್ಗೀಸ್ ಮಾತನಾಡಿ, ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಗಲ್ಲಿ ಗಲ್ಲಿಗಳಲ್ಲಿ ಕೆಲ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಯುವಕರು ಗಾಂಜಾ ವ್ಯಸನಿಗಳಾಗುತ್ತಿದ್ದಾರೆ ಎಂದರು. ಇದಕ್ಕೆ ಪೂರಕವಾಗಿ ಮಾತನಾಡಿದ ಕಾರ್ಮಿಕ ಮುಖಂಡ ಪಿ.ಆರ್. ಭರತ್, ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ಬಳಿಕ ಕೆಲ ಪಡ್ಡೆ ಹುಡುಗರು

(ಮೊದಲ ಪುಟದಿಂದ) ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಗ್ರಾಮಸ್ಥ ಓ.ಎಂ. ಮುಸ್ತಫ ಮಾತನಾಡಿ, ಸಿದ್ದಾಪುರ ಆಟೋ ನಿಲ್ದಾಣದಲ್ಲಿ ರಾತ್ರಿ ವೇಳೆ ನಿಲ್ಲಿಸಿರುವ ಆಟೋಗಳು ಬಾಡಿಗೆ ಕರೆದರೆ ಇಲ್ಲಸಲ್ಲದ ನೆಪವನ್ನು ಹೇಳಿ ಬಾಡಿಗೆ ತೆರಳಲು ನಿರಾಕರಿಸುತ್ತಿದ್ದಾರೆ; ಕೆಲ ಆಟೋ ಚಾಲಕರು ಬ್ಯಾಡ್ಜ್ ಪರವಾನಿಗೆ ಇಲ್ಲದೆ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗ್ರಾಮಸ್ಥ ಟಿ.ಕೆ. ಶಿವದಾಸ್ ಮಾತನಾಡಿ, ರಸ್ತೆ ಬದಿಯಲ್ಲಿ ಕೆಲವರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದು, ವಾಹನ ಸಂಚರಿಸಲು ತೊಂದರೆಯಾಗುತ್ತಿದೆ ಎಂದರು. ಬರಡಿಯ ನಿವಾಸಿ ಮೋಣಪ್ಪ ಮಾತನಾಡಿ, ಇತ್ತೀಚೆಗೆ ಕೆಲ ಅಪ್ರಾಪ್ತ ಯುವಕರು ಬೈಕ್ ಚಾಲನೆ ಮಾಡುತ್ತಿದ್ದು, ಮುನ್ನೆಚ್ಚರಿಕೆಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕಬೇಕೆಂದರು.

ಠಾಣಾಧಿಕಾರಿ ಸುಬ್ರಮಣ್ಯ ಮಾತನಾಡಿ, ಗಾಂಜಾ ಸೇವಿಸುತ್ತಿರುವ ಯುವಕರ ಬಗ್ಗೆ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವದು ಎಂದು ತಿಳಿಸಿದರು. ನೆಲ್ಯಹುದಿಕೇರಿ ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವ ಲಾರಿಗಳನ್ನು ಈಗ ಇರುವ ಲಾರಿ ನಿಲ್ದಾಣದಿಂದ ಸ್ಥಳಾಂತರ ಮಾಡಲು ಚಿಂತನೆ ನಡೆಸಲಾಗಿದೆ ಎಂದರು. ಸುಗಮ ಸಂಚಾರಕ್ಕೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದರು.

ಸಭೆಯಲ್ಲಿ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ ಸದಸ್ಯೆ ಸುಹದಾ ಆಶ್ರಫ್, ಗ್ರಾ.ಪಂ. ಉಪಾಧ್ಯಕ್ಷೆ ಸಫಿಯಾ, ಪಿ.ಡಿ.ಓ. ನಂಜುಂಡಸ್ವಾಮಿ ಸೇರಿದಂತೆ ಗ್ರಾ.ಪಂ. ಸದಸ್ಯರು ಇದ್ದರು.