ಸೋಮವಾರಪೇಟೆ, ಸೆ. 26: ಮಡಿಕೇರಿ ದಸರಾ ಕಾರ್ಯಕ್ರಮಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಕಡಿಮೆಯಾಗಿರುವ ಬಗ್ಗೆ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದು, ಹೆಚ್ಚುವರಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವದು ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ತಿಳಿಸಿದರು. ನಗರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರು ರೂ. 10 ಲಕ್ಷ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ. ದಸರಾ ಅನುದಾನಕ್ಕೆ ಕೊರತೆಯಾಗುವದಿಲ್ಲ. ಈಗ ನೀಡಿರುವ ಅನುದಾನ ಸಾಲುವದಿಲ್ಲ ಎಂಬ ಅಂಶ ಮುಖ್ಯಮಂತ್ರಿಗಳ ಗಮನಕ್ಕೂ ಬಂದಿದೆ. ಯುವ ದಸರಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ ಅವರು ಆಗಮಿಸಲಿದ್ದು, ಅವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ, ಹೆಚ್ಚಿನ ಅನುದಾನಕ್ಕೆ ಸರ್ಕಾರದ ಮಟ್ಟದಲ್ಲೇ ಪ್ರಯತ್ನಿಸಲಾಗುವದು ಎಂದು ವೀಣಾ ಅಚ್ಚಯ್ಯ ನುಡಿದರು.