ಕೂಡಿಗೆ, ಅ. 3: ಕರ್ನಾಟಕ ಪಂಚಾಯತ್ ರಾಜ್ ತಾಲೂಕಿನ ಒಂದು ಗ್ರಾಮ ಪಂಚಾಯ್ತಿಗೆ ಸರ್ಕಾರದ ವತಿಯಿಂದ ಪ್ರತಿವರ್ಷ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ನೀಡಲಾಗುವದು. ಅದರಂತೆ 2016-17ನೇ ಸಾಲಿನಲ್ಲಿ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ಪಡೆದಿದೆ.ಪ್ರಶಸ್ತಿ ಪುರಸ್ಕಾರಕ್ಕೆ ಜಿಲ್ಲಾ ಪಂಚಾಯಿತಿಯ ವತಿಯಿಂದ ಆಯ್ಕೆಯಾದ ಹೆಬ್ಬಾಲೆ ಗ್ರಾಮ ಪಂಚಾಯಿತಿಯನ್ನು ಪಾರದರ್ಶಕ ಗ್ರಾಮ ಪಂಚಾಯಿತಿಯನ್ನಾಗಿ ಗುರುತಿಸಿ (ಮೊದಲ ಪುಟದಿಂದ) ಸರ್ಕಾರದ ಅನುದಾನಗಳ ಸಕಾಲಿಕ ಬಳಕೆ, ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವದು ಮತ್ತು ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಪೂರ್ಣ ಮಾಡಿರುವದು, ಪೂರ್ಣ ಕಂಪ್ಯೂಟರೀಕರಣ, ಶುಚಿತ್ವ ಮತ್ತು ನೈರ್ಮಲೀಕರಣ, ಕಂದಾಯ ವಸೂಲಾತಿಯಲ್ಲಿ ಹೆಚ್ಚು ಸಂಗ್ರಹಣೆ, ಗ್ರಾಮ ಪಂಚಾಯ್ತಿ ನಿರ್ವಹಣೆಯಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ಗಾಂಧೀ ಗ್ರಾಮ ಪುರಸ್ಕಾರ ನೀಡಲಾಗಿದೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರಿಂದ ಪ್ರಶಸ್ತಿ ಪತ್ರ ಮತ್ತು ರೂ. 5 ಲಕ್ಷ ಚೆಕ್‍ನ್ನು ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ, ಉಪಾಧ್ಯಕ್ಷೆ ಪದ್ಮ ಹಾಗೂ ಅಭಿವೃದ್ಧಿ ಅಧಿಕಾರಿ ರಾಕೇಶ್ ಸ್ವೀಕರಿಸಿದರು.