ಮಡಿಕೇರಿ, ಅ. 2: ಸತ್ಯ ಮತ್ತು ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಗಾಂಧೀಜಿಯವರ ತತ್ವಗಳು ಎಲ್ಲೆಡೆ ಪಸರಿಸಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಹಾಗೂ ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಐಕ್ಯತೆ ಮತ್ತು ಏಕತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಗಾಂಧೀಜಿ ಅವರು ಸಮಾಜದಲ್ಲಿನ ಜಾತೀಯತೆ

(ಮೊದಲ ಪುಟದಿಂದ) ಹಾಗೂ ಅಸ್ಪøಶ್ಯತೆ ನಿವಾರಣೆಗೆ ಪ್ರಯತ್ನಿಸಿದರು ಎಂದು ಸ್ಮರಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಮತ್ತು ಜೈ ಕಿಸಾನ್ ಘೋಷಣೆಯನ್ನು ಪ್ರಕಟಿಸುವ ಮೂಲಕ ದೇಶದ ಸೇನೆ ಹಾಗೂ ಕೃಷಿ ಕ್ಷೇತ್ರದ ಮಹತ್ವ ಸಾರಿದ್ದರು ಎಂದು ಅವರು ವಿವರಿಸಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ ಮಹಾತ್ಮ ಗಾಂಧಿ ಜಯಂತಿಯನ್ನು ‘ಅಂತರ ರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಾತ್ಮ ಗಾಂಧೀಜಿಯವರ ಕೊಡಗೆ ಅಪಾರ ಎಂದರು.

ಜಿಲ್ಲಾ ಕೇಂದ್ರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಡಳಿತ ವತಿಯಿಂದ ಜಾಗ ನೀಡಲಾಗಿದೆ. ಅದರಂತೆ ಸರ್ಕಾರದಿಂದ ಹಣವೂ ಬಿಡುಗಡೆಯಾಗಿದೆ. ಆ ನಿಟ್ಟಿನಲ್ಲಿ ಆದಷ್ಟು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ ಯಾವದೇ ಸಮಸ್ಯೆಗಳನ್ನು ಸಂಧಾನ ಹಾಗೂ ರಾಜಿಸೂತ್ರದಿಂದ ಬಗೆಹರಿಸಲು ಸಾಧ್ಯ ಎಂಬುದನ್ನು ಮಹಾತ್ಮ ಗಾಂಧೀಜಿಯವರು ಮನಗಂಡಿದ್ದರು ಎಂದು ಸ್ಮರಿಸಿದರು.

ಗಾಂಧೀಜಿ ಅವರು ಭಾರತ ರಾಷ್ಟ್ರ ನಿರ್ಮಾಣದಲ್ಲಿ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿದವರು, ಗಾಂಧೀಜಿ ಕಂಡ ಕನಸನ್ನು ನನಸು ಮಾಡಲು ಎಲ್ಲರೂ ಶ್ರಮಿಸಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆ ಗ್ರಾಮಗಳ ಅಭ್ಯುದಯಕ್ಕೆ ಪ್ರೇರಣೆ ಎಂದು ಹೇಳಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರೈತರು ಅಭಿವೃದ್ಧಿಯಾದಲ್ಲಿ, ರಾಷ್ಟ್ರ್ರದ ಪ್ರಗತಿ ಸಾಧ್ಯ ಎಂಬುದನ್ನು ಸಾರಿದ್ದರು. ಜೊತೆಗೆ ಸೇನೆಯ ಮಹ್ವತವನ್ನು ತಿಳಿದಿದ್ದರು ಎಂದರು.

ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಕಟಿಸಿರುವ ವಿಶೇಷ ಸಂಚಿಕೆಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸರ್ವೋದಯ ಸಮಿತಿ ಸದಸ್ಯ ಕೆ.ಟಿ. ಬೇಬಿಮ್ಯಾಥ್ಯು, ಕೋಡಿ ಚಂದ್ರಶೇಖರ, ಅಂಬೆಕಲ್ ಕುಶಾಲಪ್ಪ, ಅಂಬೇಕಲ್ ನವೀನ್, ಸುಬ್ರಮಣಿ, ವಾಸುದೇವ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಪೌರಾಯುಕ್ತೆ ಬಿ.ಶುಭಾ, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ತಹಶೀಲ್ದಾರ್ ಕುಸುಮ, ತಾ.ಪಂ. ಇಒ ಜೀವನ್ ಕುಮಾರ್, ನಾನಾ ಇಲಾಖೆ ಅಧಿಕಾರಿಗಳು, ಇತರರು ಇದ್ದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಸಾವಿತ್ರಿ ನಿರೂಪಿಸಿದರು. ರೇವತಿ ರಮೇಶ್ ಮತ್ತು ತಂಡದವರು ನಾಡಗೀತೆ ಹಾಡಿದರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ವಂದಿಸಿದರು.