ಮಡಿಕೇರಿ, ಅ.12: ತಾ. 17 ರಂದು ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5) ರಲ್ಲಿ ದತ್ತವಾದ ಅಧಿಕಾರದಂತೆ ಅಕ್ಟೋಬರ್, 17 ರ ಬೆಳಿಗ್ಗೆ 6 ಗಂಟೆಯಿಂದ ಅದೇ ದಿನ ಸಂಜೆ 6 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಯವರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಆದೇಶ ಹೊರಡಿಸಿದ್ದಾರೆ.

(ಮೊದಲ ಪುಟದಿಂದ) ಏಕಮುಖ ಸಂಚಾರ ವ್ಯವಸ್ಥೆ:- ಮಡಿಕೇರಿ ಹಾಗೂ ಮಂಗಳೂರು ಕಡೆಯಿಂದ ಭಾಗಮಂಡಲಕ್ಕೆ ಹೋಗುವ ಎಲ್ಲಾ ವಾಹನಗಳು ತಾಳತ್‍ಮನೆ- ಉಡೋತ್‍ಮೊಟ್ಟೆ- ಅಪ್ಪಂಗಳ ಮಾರ್ಗವಾಗಿ ಭಾಗಮಂಡಲಕ್ಕೆ ಸಂಚರಿಸುವದು. ಭಾಗಮಂಡಲದಿಂದ ಮಡಿಕೇರಿ ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಅಪ್ಪಂಗಳ- ಪನ್ಯ-ಕಾಟಕೇರಿ ಮಾರ್ಗವಾಗಿ ಸಂಚರಿಸುವದು. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ತಿಳಿಸಿದ್ದಾರೆ.