ಮಡಿಕೇರಿ, ಅ.21: ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಬಲಿಯಾದ ಪೊಲೀಸ್ ಹುತಾತ್ಮರಿಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ.ಪವನೇಶ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಲೆಫ್ಟಿನೆಂಟ್ ಜನರಲ್ (ನಿವೃತ್ತ) ಬಿ.ಸಿ.ನಂದ, ಪೊಲೀಸ್ ಅಧೀಕ್ಷಕರ ಪರವಾಗಿ ಅಪ್ಪಯ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಪರವಾಗಿ ನಾಗಪ್ಪ, ಸುಂದರರಾಜ್, ಪೊಲೀಸ್ ನಿರೀಕ್ಷಕರಾದ ಮೇದಪ್ಪ, ಜಿಲ್ಲಾ ಶಸಸ್ತ್ರ ಪಡೆಯ ತಿಮ್ಮಪ್ಪಗೌಡ, ನಗರಸಭೆ ಪರವಾಗಿ ಕಾವೇರಮ್ಮ ಸೋಮಣ್ಣ, ವೈದ್ಯಕೀಯ ಕಾಲೇಜು ಪರವಾಗಿ ನಿರ್ದೇಶಕ ಮಹೇಂದ್ರ, ರೋಟರಿ ಕ್ಲಬ್ ಪರವಾಗಿ ಪ್ರೀತಂ, ವಕೀಲರ ಪರವಾಗಿ ಸಿ.ಟಿ.ಜೋಸೆಫ್, ಮಾಧ್ಯಮಗಳ ಪರವಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ನಂಜಪ್ಪ, ಪೊಲೀಸ್ ನಿರೀಕ್ಷಕರ ಪರವಾಗಿ ಜಗದೀಶ್, ಸಹಾಯಕ ಪೊಲೀಸ್ ಅಧಿಕಾರಿಗಳ ಪರವಾಗಿ ದೇವಯ್ಯ, ಮಹಿಳಾ ಪೊಲೀಸರ ಪರವಾಗಿ ಅಚ್ಚಮ್ಮ, ಪೊಲೀಸರ ಪರವಾಗಿ ಎಂ.ಟಿ.ಮಹದೇವ, ಮನಮೋಹನ್, ಮೊಹಿದ್ದೀನ್ ಇತರರು ಪೊಲೀಸ್ ಹುತಾತ್ಮರ ಪ್ರತಿಮೆಗೆ ಹೂಗುಚ್ಚ ಅರ್ಪಿಸಿ ಗೌರವ ನಮನ ಸಮರ್ಪಣೆ ಮಾಡಿದರು.

ಬಳಿಕ ಮಾತನಾಡಿದ ನ್ಯಾಯಾಧೀಶ ಡಿ.ಪವನೇಶ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ತರವಾಗಿದೆ. ಕಠಿಣ ಪರಿಸ್ಥಿತಿಯಲ್ಲಿ ಕೊಡಗಿನ ಪೊಲೀಸರು

(ಮೊದಲ ಪುಟದಿಂದ) ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಡಗು ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರ ನೇತೃತ್ವದಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸಮಾಜದಲ್ಲಿ ಶಾಂತಿಗಾಗಿ ಪೊಲೀಸರು ದಿನದ 24 ಗಂಟೆಯೂ ಜಾಗೃತರಾಗಿ ಕೆಲಸ ನಿರ್ವಹಿಸುತ್ತಾರೆ. ಪೊಲೀಸರ ಸಮಯ ಪ್ರಜ್ಞೆಯಿಂದ ದೇಶದಲ್ಲಿ ನಾಗರಿಕರ ರಕ್ಷಣೆ ಮತ್ತು ಶಾಂತಿ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ತರ ಎಂದು ಹೇಳಿದರು.

ಪೊಲೀಸರು ತಮ್ಮ ಆತ್ಮ ರಕ್ಷಣೆಯನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗೆ ಮುಂದಾಗುತ್ತಾರೆ. ಪೊಲೀಸರ ಸೇವೆ ಸದಾ ಸ್ಮರಣೀಯ. ಕಠಿಣ ಸಂದರ್ಭದಲ್ಲಿ ಸಮಸ್ಯೆ ಹಾಗೂ ಸವಾಲುಗಳನ್ನು ಬಗೆಹರಿಸುವಲ್ಲಿ ಪೊಲೀಸರ ಪಾತ್ರ ದೊಡ್ಡದು ಎಂದರು.

ನಾಗರಿಕರು ನೆಮ್ಮದಿಯಾಗಿ ಇರಬೇಕಾದರೆ ಪೊಲೀಸರ ಕರ್ತವ್ಯ ಪ್ರಜ್ಞೆ ಹೆಚ್ಚಿರುತ್ತದೆ. ಪೊಲೀಸರು ಕೆಲಸದಲ್ಲಿ ನಿಷ್ಠೆ ತೋರಿಸದಿದ್ದರೆ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಊಹಿಸಲು ಅಸಾಧ್ಯ ಎಂದು ಅವರು ಹೇಳಿದರು.

ಕಳೆದ ವರ್ಷ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳ ವಿವರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಂಡಿಸಿದರು.

ದೇಶದಲ್ಲಿ 370 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದೇಶ ಹಾಗೂ ಸಮಾಜದ ರಕ್ಷಣೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಅರ್ಪಿಸಲಾಯಿತು. ಪೊಲೀಸ್ ಮುಖ್ಯ ಪೇದೆ ಸಿದ್ದೇಶ್ ಅವರ ನೇತೃತ್ವದ ಪೊಲೀಸ್ ವಾದ್ಯ ತಂಡದವರು ರಾಷ್ಟ್ರಗೀತೆ ಹಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿದೇವಯ್ಯ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್, ಸದಸ್ಯರಾದ ಜುಲೇಕಾಬಿ, ಅನಿತಾ ಪೂವಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.