ಮಡಿಕೇರಿ, ಅ. 25: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳು ಕಾಂಗ್ರೆಸ್ ವಶವಾಗಲಿದೆ ಎಂದು ಪಕ್ಷದ ಹಿಂದುಳಿದ ಘಟಕದ ಅಧ್ಯಕ್ಷ ಎಸ್.ಕೆ. ಸುಂದರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕಾಂಗ್ರೆಸ್‍ನ ಹಿಂದುಳಿದ ಘಟಕದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸಹಕಾರ ನೀಡಿದರೆ ಪಕ್ಷ ಸಂಘಟನೆ ಅತ್ಯಂತ ಸುಲಭವೆಂದು ಅಭಿಪ್ರಾಯಪಟ್ಟರು.

ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಸರಾ ಚಂಗಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಸುಂದರ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಕಾನೆಹಿತ್ಲು ಮೊಣ್ಣಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಮತ್ತು ಮಾದಾಪುರ ಗ್ರಾ.ಪಂ. ಸದಸ್ಯ ಇಬ್ರಾಹಿಂ ಸೀದಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪ್ರಬಲವಾಗಿ ಸಂಘಟಿಸಿ 2 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವದೇ ನಮ್ಮ ಪ್ರಮುಖ ಗುರಿಯಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಪ್ರತಿ ಮನೆ ಮನೆಗಳಿಗೆ ತಿಳಿಸುವ ಕಾರ್ಯ ಕಾರ್ಯಕರ್ತರಿಂದ ಆಗಬೇಕು. ಪಕ್ಷದ ಎಲ್ಲಾ ಘಟಕಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ತೆನ್ನಿರ ಮೈನಾ, ಪ್ರಮುಖರಾದ ಹರಿಣಿ, ನಾರಾಯಣ ಪೂಜಾರಿ, ಕೆ.ಕೆ. ಶಶಿಧರ್, ಶೇಖರ್, ಕುಂಬೂರು ಪರಶುರಾಮ, ಕಾಂಡನಕೊಲ್ಲಿ ರಘು ಮಾದಪ್ಪ, ಹಟ್ಟಿಹೊಳೆ ಪ್ರಕಾಶ್, ಹಾಲೇರಿ ಸಂಗೀತ ರಮೇಶ್, ಮೊಣಪ್ಪ ಪೂಜಾರಿ, ಪುಷ್ಪ ಪೂಣಚ್ಚ, ಸದಾನಂದ ಬಂಗೇರ, ಕೊಡಂಬೂರು ಬಿ.ಎಂ. ಹರೀಶ್ ಉಪಸ್ಥಿತರಿದ್ದರು. ಇಬ್ರಾಹಿಂ ಸ್ವಾಗತಿಸಿ, ಉಪಾಧ್ಯಕ್ಷ ವಿಜಯನ್ ವಂದಿಸಿದರು.