ಮಡಿಕೇರಿ, ಅ. 26: ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮರಗೋಡಿನ ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನವೆಂಬರ್ 1 ಬೆಳಗ್ಗೆ 10.30 ಕ್ಕೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಪರ್ಧೆಯು ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಮೊದಲಾದ ಕನ್ನಡ ಕೇಂದ್ರಿತವಾದ ವಿಚಾರಗಳನ್ನು ಕುರಿತಂತೆ ನಡೆಯಲಿದ್ದು ಪ್ರತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಪಾಲ್ಗೊಳ್ಳಲು ಅವಕಾಶವಿರುತ್ತದೆ. ಮಡಿಕೇರಿ ತಾಲೂಕಿನ ಪ್ರತಿಯೊಂದು ಪ್ರೌಢಶಾಲೆಯ ತಂಡವೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ.ಸಾ.ಪ ಮೂರ್ನಾಡು ಘಟಕದ ಅಧ್ಯಕ್ಷ ಪಿ.ಪಿ. ಸುಕುಮಾರ್ ಮನವಿ ಮಾಡಿದ್ದಾರೆ.