ಸೋಮವಾರಪೇಟೆ, ನ. 1: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಹಾಕಿ ಮತ್ತು ಬೇಸ್ ಬಾಲ್ ಕ್ರೀಡೆಯಲ್ಲಿ ಸಾಧನೆ ತೋರಿರುವ ಈರ್ವರು ಕ್ರೀಡಾ ಪಟುಗಳನ್ನು ಸನ್ಮಾನಿಸಲಾಯಿತು.

ಸಮೀಪದ ಮೆಣಸ ಗ್ರಾಮದ ನಿವಾಸಿ, ರಾಷ್ಟ್ರೀಯ ಹಾಕಿ ತರಬೇತುದಾರ ಎಂ.ಕೆ. ದೇವರಾಜಮ್ಮ, ಯಡವಾರೆಯಲ್ಲಿ ನೆಲೆಸಿರುವ ಮೂಲತಃ ಮೂರ್ನಾಡು-ಬಾಡಗ ನಿವಾಸಿ ಊರಳಮ್ಮಂಡ ಬಿ. ಸುರೇಶ್ ಅವರ ಪುತ್ರಿ, ಅಂತರರಾಷ್ಟ್ರೀಯ ಬೇಸ್ ಬಾಲ್ ಕ್ರೀಡೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕ ಏಕೈಕ ಆಟಗಾರ್ತಿ ಯು.ಎಸ್. ಭವ್ಯ ಅವರುಗಳನ್ನು ಸನ್ಮಾನಿಸಲಾಯಿತು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯೆ ತಂಗಮ್ಮ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಚಂದ್ರಶೇಖರ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದು ಸಾಧಕರನ್ನು ಸನ್ಮಾನಿಸಿ ಶುಭ ಹಾರೈಸಿದರು.