ಸುಂಟಿಕೊಪ್ಪ, ನ. 11: ಪ್ರತಿಭೆಗಳು ಕಠಿಣ ಪರಿಶ್ರಮದಿಂದ ಸಾಧನೆಯ ಶಿಖರಕ್ಕೆ ಮುನ್ನುಡಿ ಇಟ್ಟರು ಎಂದು ಸೋಮವಾರಪೇಟೆ ತಾಲೂಕು ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಹೇಳಿದರು.

ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಮತ್ತು ಟೆಕ್ನಾಲಜಿ ಮ್ಯೂಸಿಯಂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಸಂತ ಮೇರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ ಸಿ.ವಿ. ರಾಮನ್ ಅವರ 129ನೇ ಜನ್ಮದಿನದ ಅಂಗವಾಗಿ ಏರ್ಪಡಿಸಿದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಆಸಕ್ತಿ ಬೆಳೆಸಲು ಪೋಷಕರು, ಶಿಕ್ಷಕರು ಪೂರಕವಾದ ಪರಿಸರ ನಿರ್ಮಿಸಿಕೊಟ್ಟರೆ ಅಸಾಧರಣ ಸಾಧನೆ ಮಾಡಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂತಮೇರಿ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ಎಡ್ವರ್ಡ್ ವವಿಲಿಯಂ ಸಲ್ಢಾನಾ ಮಾತನಾಡಿ, ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಅವಶ್ಯಕತೆ ಇದೆ. ರೈತರೂ ಸಹ ವೈಜ್ಞಾನಿಕ ಮನೋಭಾವನೆಯಿಂದ ವೃತ್ತಿ ಸೇವೆ ಮಾಡುತ್ತಾರೆ ಎಂದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಸಂಯೋಜಕ ಮೂರ್ತಿ ಮಾತನಾಡಿದರು.

ರಾಜ್ಯ ವಿಜ್ಞಾನ ಪರಿಷತ್ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್ ವಿಜ್ಞಾನ ವಸ್ತು ಪ್ರದರ್ಶನ ಮತ್ತು ವಿಜ್ಞಾನ ನೋಬೆಲ್ ಪುರಸ್ಕøತ ಮೇರಿ ಕ್ಯುರಿ ಮತ್ತು ಸರ್ ಸಿ.ವಿ. ರಾಮನ್ ಕುರಿತು ಪ್ರಾಸ್ತಾವಿಕ ನುಡಿಗಳಾಡಿದರು.

ಸಂತ ಮೇರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ಸಿ.ಎನ್. ಕಾವ್ಯ ಸ್ವಾಗತಿಸಿ, ಕನ್ನಡ ಶಿಕ್ಷಕಿ ಸೆವ್ರಿನ್ ಡಿಸೋಜ ನಿರೂಪಿಸಿ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ವಂದಿಸಿದರು.