ಕುಶಾಲನಗರ, ನ. 12: ಕರ್ನಾಟಕ ಕಾವಲುಪಡೆ ಕೊಡಗು ಜಿಲ್ಲಾ ಘಟಕದ 7ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆ ತಾ. 16 ರಂದು ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ. ಕೃಷ್ಣ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂದು ಬೆಳಿಗ್ಗೆ ಜಾನಪದ ಕಲಾ ತಂಡಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ತೆರಳಿ ನಂತರ ಕುಶಾಲನಗರದ ಅನುಗ್ರಹ ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಕಾವಲುಪಡೆಯ ರಾಜ್ಯಾಧ್ಯಕ್ಷ ಎಂ. ಮೋಹನ್ ಕುಮಾರ್ ಗೌಡ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಗಣ್ಯರು ಪಾಲ್ಗೊಳ್ಳ ಲಿದ್ದಾರೆ. ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಸೋಮವಾರಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವ ಸ್ವಾಮಿ, ವೀರಾಜಪೇಟೆ ಶಿಕ್ಷಕಿ ಎ.ಪಿ. ಸಾವಿತ್ರಿ, ಉಪನ್ಯಾಸಕಿ ಕ್ಲಾರಾ ರೇಷ್ಮ, ದೀಕ್ಷಾ ಅವರು ಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವದು ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ತಾಲೂಕು ಅಧ್ಯಕ್ಷ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಎಂ.ಡಿ. ರಂಗಸ್ವಾಮಿ, ಮಹಿಳಾ ಕಾರ್ಯದರ್ಶಿ ಪ್ರೇಮಗೀತ ಇದ್ದರು.