ಗೋಣಿಕೊಪ್ಪ ವರದಿ, ನ. 16: ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ಸಮಾವೇಶ ನಡೆಸಲಾಗುವದು ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಮಹಿಳಾ ಘಟಕದ ಅಧ್ಯಕ್ಷೆ ಕಡೇಮಾಡ ಕುಸುಮಾ ಜೋಯಪ್ಪ ಹೇಳಿದರು.

ಪಕ್ಷದ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಪಕ್ಷದ ಸಭೆಯಲ್ಲಿ ಮಾತನಾಡಿ, ಸಮಾವೇಶಕ್ಕೆ ಪಕ್ಷದ ವರಿಷ್ಠರು, ಸಚಿವರು ಆಗಮಿಸಲಿದ್ದಾರೆ ಎಂದರು. ಕಾಂಗ್ರೆಸ್‍ಗೆ ಈ ಬಾರಿ ಗೆಲ್ಲಲು ಉತ್ತಮ ಅವಕಾಶವಿದೆ. ಪ್ರತಿ ವಲಯ ಮಟ್ಟದಲ್ಲೂ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಂಡು ರಾಜಕೀಯವಾಗಿ ಮುಂದೆ ಬರಲು ಇಚ್ಚೆಪಟ್ಟಿದ್ದಾರೆ.

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಿಂದ ಪಕ್ಷಕ್ಕೆ ಉತ್ತಮ ಬೆಂಬಲ ದೊರಕಿದೆ. ಮುಂದೆ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಮಹಿಳೆಯರು ಒಟ್ಟಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಬೇಕು ಎಂದು ಕರೆ ನೀಡಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಮಹಿಳೆಯರು ಹೆಚ್ಚಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವದು ಉತ್ತಮ ಬೆಳವಣಿಗೆ ಪಕ್ಷದ ವರಿಷ್ಠರು ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರುಗಳಾದ ಬಿ.ಎನ್. ಪ್ರಕಾಶ್, ಅಬ್ದುಲ್ ಸಮ್ಮದ್, ಪ್ರಮೋದ್ ಗಣಪತಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೊಂಗಂಡ ಮಮಿತಾ ಮನೋಜ್ ಉಪಸ್ಥಿತರಿದ್ದರು.