ವೀರಾಜಪೇಟೆ, ನ. 19: ಪ್ರಧಾನ ಮಂತ್ರಿಗಳ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಮನೆ ಮನೆಗೆ ತಲುಪಿಸಲಾಗಿದೆ ಎಂದು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಬಿ.ಜೆ.ಪಿ. ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ ಎಂ.ಎಂ. ಪರಮೇಶ್ವರ ಹೇಳಿದರು.

ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಕಾರ್ಮಿಕ ಕುಟುಂಬದ 28 ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ ಬಳಿಕ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿರುವ ಕಡು ಬಡವರಿಗೆ ಅಧಿಕಾರಿಗಳ ಅಸಡ್ಡೆಯಿಂದ ಸರ್ಕಾರದ ಯೋಜನೆಗಳ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ. ಮತ್ತೆ 25 ಕುಟುಂಬಗಳನ್ನು ಆಯ್ಕೆ ಮಾಡಲಾಗಿದ್ದು, ಅವರಿಗೂ ಸದ್ಯದಲ್ಲೇ ಗ್ಯಾಸ್ ವಿತರಿಸಲಾಗುವದು ಎಂದರು.

ಈ ಸಂದರ್ಭ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಕಿರಣ್ ಕುಮಾರ್, ಮಾಜಿ ಸದಸ್ಯ ಚೋಟು ಬಿದ್ದಪ್ಪ, ಕರಡ ಗ್ರಾಮದ ಸೋಮಪ್ಪ ಮುಂತಾದವರು ಉಪಸ್ಥಿತರಿದ್ದರು.