ಸೋಮವಾರಪೇಟೆ, ನ.26: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವರಾದ ವಿನಯ್ ಕುಲಕರ್ಣಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿಯ ಕೊಡ್ಲಿಪೇಟೆ ಹೋಬಳಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೊಡ್ಲಿಪೇಟೆ ಪಟ್ಟಣದ ಬಸವೇಶ್ವರ ದೇವಾಲಯದ ಎದುರು ಪ್ರತಿಭಟನೆ ನಡೆಸಿ ಸಚಿವ ವಿನಯ್ ಕುಲಕರ್ಣಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಂತರ ಬಸ್ ನಿಲ್ದಾಣಕ್ಕೆ ತೆರಳಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಕೊಲೆ ಪ್ರಕರಣದಲ್ಲಿ ಆರೋಪ ಕೇಳಿ ಬಂದಿರುವ ಸಚಿವರನ್ನು ತಕ್ಷಣ ಬಂಧಿಸಬೇಕು. ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಆರೋಪಿತ ಸಚಿವರ ರಕ್ಷಣೆಗೆ ಸರ್ಕಾರವೇ ನಿಂತಿರುವದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಯುವ ಮೋರ್ಚಾ ಹೋಬಳಿ ಅಧ್ಯಕ್ಷ ಮಧು, ಪದಾಧಿಕಾರಿಗಳಾದ ನಾಗರಾಜ್, ಭಗವಾನ್, ನಾಗೇಶ್, ಸಂದೇಶ್, ಗಿರೀಶ್, ನಂದೀಶ್, ರಾಜಣ್ಣ, ಸಿದ್ದೇಶ್, ಮೋಕ್ಷಿತ್ ಸೇರಿದಂತೆ ಇತರರು ಭಾಗವಹಿಸಿದ್ದರು.