ಸೋಮವಾರಪೇಟೆ, ನ.26: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಲ್ಯಾಬ್ ಟೆಕ್ನೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್ (44) ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಮೂಲತಃ ಮಂಡ್ಯ ಜಿಲ್ಲೆಯವರಾದ ರಮೇಶ್ ಅವರು ಕಳೆದ 17 ವರ್ಷಗಳಿಂದ ಲ್ಯಾಬ್ ಟೆಕ್ನೀಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ವಸತಿ ಗೃಹದಲ್ಲಿದ್ದ ಸಂದರ್ಭ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಸೋಮವಾರಪೇಟೆ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಮೈಸೂರಿಗೆ ಕರೆದೊಯ್ಯಲಾಯಿತು.

ಮೈಸೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಯ ನಂತರ ಚೇತರಿಸಿಕೊಂಡಂತೆ ಕಂಡುಬಂದ ರಮೇಶ್ ಅವರಿಗೆ ಮಧ್ಯಾಹ್ನ ಊಟ ಮಾಡಿದ ನಂತರ ತೀವ್ರವಾಗಿ ಎದೆನೋವು ಕಾಣಿಸಿಕೊಂಡಿತು. ತಕ್ಷಣ ತೀವ್ರ ನಿಗಾ ಘಟಕಕ್ಕೆ ದಾಖಲಿಸುತ್ತಿದ್ದಂತೆ ಸಾವನ್ನಪ್ಪಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತರ ಪತ್ನಿ ಸುಮ ಅವರು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಮೃತ ರಮೇಶ್ ಅವರು ಪತ್ನಿ ಸೇರಿದಂತೆ ಈರ್ವರು ಮಕ್ಕಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ನಡೆಯಲಿದೆ.