ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕೂಡಿಗೆ, ಡಿ. 15: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬಸವನಹಳ್ಳಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು.

ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಆಕಾಂಕ್ಷಿನಿ ವಿರೂಪಾಕ್ಷಯ್ಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಯೋಜನೆ ಹಾಗೂ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಲಾಗುತ್ತಿದೆ ಎಂದರು. ಗ್ರಾಮ ಪಂಚಾಯಿತಿಗೆ ಒಳಪಡುವ ಬಸವನಹಳ್ಳಿ, ಸುಣ್ಣದಕೆರೆ, ಗುಡ್ಡೆಹೊಸೂರು, ಬಸವನಹಳ್ಳಿಯ ದಿಡ್ಡಳ್ಳಿ ಪುರ್ನವಸತಿ ಕೇಂದ್ರಗಳಲ್ಲಿ ಅಭಿಯಾನ ನಡೆಸಲಾಯಿತು.

ಅಭಿಯಾನದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಸ್ಥಾನೀಯ ಸಮಿತಿಯ ಅಧ್ಯಕ್ಷರುಗಳು, ಗುಡ್ಡೆಹೊಸೂರು ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಸದಸ್ಯರು, ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಇದ್ದರು.